ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಿಎಸ್ಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
‘ಇಂಡಿಯಾ’ ಮೈತ್ರಿಕೂಟದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖರ್ಗೆ, ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೆ, ಅದರ ಲಾಭವನ್ನು ಪ್ರಧಾನಿ ಮೋದಿ ಪಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು
ದೇಶದ 80 ಕೋಟಿ ಬಡವರಿಗೆ 5 ಕೆ.ಜಿ ಪಡಿತರ ನೀಡುವುದಾಗಿ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 10 ಕೆ.ಜಿ ಪಡಿತರ ಹಂಚಲಾಗುವುದು ಎಂದರು.
ಈಗಿನ ಪ್ರಧಾನಿಯ ಹಾಗೆ ಹಿಂದಿನ ಯಾವ ಪ್ರಧಾನಿಗಳು ಜನರನ್ನು ಪ್ರಚೋದಿಸುವ ಕೆಲಸ ಮಾಡಿಲ್ಲ. ಪದೇ ಪದೇ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಮೋದಿ ಪ್ರಜಾಪ್ರಭುತ್ವದ ತತ್ವಗಳಿಗೆ ಬದ್ಧವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇಂಡಿಯಾ ಅಧಿಕಾರಕ್ಕೆ ಬಂದರೆ ಟಿಎಂಸಿಯು ಸರ್ಕಾರದ ಭಾಗವಾಗಲಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಮೊದಲಿಗೆ ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇತ್ತೀಚೆಗಷ್ಟೇ ‘ಇಂಡಿಯಾ‘ ಸರ್ಕಾರ ರಚನೆಯಾದರೆ ಟಿಎಂಸಿಯೂ ಸರ್ಕಾರದ ಭಾಗವಾಗಲಿದೆ ಎಂದು ಹೇಳಿದ್ದಾರೆ. ಸ್ವಾಭಾವಿಕವಾಗಿಯೇ ಅವರು ಮೈತ್ರಿಯ ಜೊತೆಗಿದ್ದಾರೆ. ಅಧೀರ್ ರಂಜನ್ ಒಬ್ಬರೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಅಧಿಕಾರಕ್ಕೆ ಬಂದ ನಂತರ ದೇಶದ ಎಲ್ಲಾ ಧಾರ್ಮಿಕ ಸ್ಥಳಗಳನ್ನು ರಕ್ಷಿಸಲಾಗುವುದು ಎಂದು ಎನ್ಸಿಪಿ(ಎಸ್ಸಿಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದರು.