ಕೆ.ಆರ್.ನಗರ: ಬಿಜೆಪಿಯವರು ಹಿಂದು ದೇವರುಗಳ ಹೆಸರಿನಲ್ಲಿ ರಾಜಕಾರಣ ಮಾಡುವ ಮೂಲಕ ಲಾಭ ಪಡೆಯುತ್ತಿದ್ದರು ಆದರೆ ಕಾಂಗ್ರೆಸ್ ಸರ್ಕಾರ ಆ ದೇವರುಗಳನ್ನು ನೋಡಲು ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ ಇದರಲ್ಲಿ ಹುಳುಕು ಹುಡುಕುವ ಕೆಲಸವನ್ನು ಬಿಜೆಪಿಯವರು ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಪಟ್ಟಣದ ೧೭ನೇ ವಾರ್ಡಿನ ವರಸಿದ್ದಿ ವಿನಾಯಕ ಸೇವಾ ಸಮಿತಿಯ ೨೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಜನತೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ದವಾಗಿದೆ ಜನರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸಮಯಾವಕಾಶ ಬೇಕಾಗಿದ್ದು ಇದಕ್ಕೆ ವಿರೋಧ ಪಕ್ಷಗಳು ಸಹಕಾರ ನೀಡಬೇಕು ಎಂದರು.
ಕೇಂದ್ರ ಸರ್ಕಾರದಲ್ಲಿ ಅಕ್ಕಿ ದಾಸ್ತಾನು ಇದ್ದರೂ ಸಹ ರಾಜ್ಯಕ್ಕೆ ನೀಡುತ್ತಿಲ್ಲ ಕರ್ನಾಟಕ ಭಾರತ ದೇಶದಲ್ಲಿಯೇ ಇದೆ ಎಂಬುವುದನ್ನು ಕೇಂದ್ರ ಸರ್ಕಾರ ಅರಿತು ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವ ಸಲುವಾಗಿ ರಾಜ್ಯ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಸಲಹೆ ನೀಡಿದ ಎಚ್.ವಿಶ್ವನಾಥ್ ಬಡಜನತೆಗಾಗಿ ನೀಡುವ ಕಾರ್ಯಕ್ರಮದಲ್ಲೂ ರಾಜಕೀಯ ಲಾಭ ಪಡೆಯಲು ಯತ್ನಿಸಬಾರದು ಎಂದು ಬಿಜೆಪಿಯವರಿಗೆ ಕಿವಿ ಮಾತು ಹೇಳಿದರು.