ಮಂಗಳೂರು(ದಕ್ಷಿಣ ಕನ್ನಡ): ಬೋಳಿಯಾರು ಘಟನೆಯ ವಿಚಾರದಲ್ಲಿ ರಾಜಕೀಯ ಮಾಡಿದರೆ ಯಾರಿಗೂ ಒಂದು ಮತವೂ ಹೆಚ್ಚಾಗದು. ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷದವರು ಸೇರಿ ನನ್ನನ್ನು ಸೋಲಿಸಲು ಪ್ರಯತ್ನಿಸಿದರೂ ಆಗಿಲ್ಲ. ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡಿ ಸಮಸ್ಯೆ ಸೃಷ್ಟಿಸುವವರು ನಿಜವಾದ ದೇಶದ್ರೋಹಿಗಳು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಅವರು ಕದ್ರಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದರು.
ಭಾರತ್ ಮಾತಾಕಿ ಜೈ ಎಂದು ಯಾರೂ ಹೇಳಬಹುದು. ಅದಕ್ಕೆ ಯಾರೂ ಆಕ್ಷೇಪ ಮಾಡುವುದಿಲ್ಲ. ಆದರೆ ಅಲ್ಲಿ ಏನೋ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ಇದನ್ನು ಪೊಲೀಸರು ಸಿಸಿಟಿವಿ ಕ್ಯಾಮರಾದ ಮೂಲಕ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆ ಮುಗಿದ ಬಳಿಕ ಮೂವರು ಬೈಕಿನಲ್ಲಿ ಬಂದು ಪ್ರಚೋದನಕಾರಿ ಘೋಷಣೆ ಕೂಗುವ ಉದ್ದೇಶವೇನು, ಇದು ತಪ್ಪು ಎಂದು ಹೇಳಿದ ಯು.ಟಿ.ಖಾದರ್, ಅದಕ್ಕೆ ಪ್ರತಿಯಾಗಿ ಅವರನ್ನು ಹಿಂಬಾಲಿಸಿಕೊಂಡು ಹಲ್ಲೆ ಮಾಡಿರುವ ಕೃತ್ಯವೂ ತಪ್ಪೇ. ಈ ಎರಡೂ ಘಟನೆಗಳ ಬಗ್ಗೆ ಪೊಲೀಸರು ಕಾನೂನು ಪ್ರಕಾರ ಕ್ರಮ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.