ಬೆಂಗಳೂರು: ಮನುಷ್ಯರು ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದರು.
ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.