Monday, April 21, 2025
Google search engine

Homeರಾಜ್ಯನಾಡೋಜ ಡಾ.ಕಮಲ ಹಂಪನಾ ನಿಧನ: ಸಿಎಂ ಸಿದ್ದರಾಮಯ್ಯ, ಸಚಿವರಿಂದ ಸಂತಾಪ

ನಾಡೋಜ ಡಾ.ಕಮಲ ಹಂಪನಾ ನಿಧನ: ಸಿಎಂ ಸಿದ್ದರಾಮಯ್ಯ, ಸಚಿವರಿಂದ ಸಂತಾಪ

ಬೆಂಗಳೂರು: ಹಿರಿಯ ಸಾಹಿತಿ, ನಾಡೋಜ ಡಾ.ಕಮಲ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ”ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ. ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಕಂಬನಿ ಮಿಡಿದಿದ್ದಾರೆ.

ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ”ಡಾ.ಕಮಲಾ ಹಂಪನಾ ಅವರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ, ಕಥೆ, ಕಾದಂಬರಿ, ವಿಮರ್ಶೆ, ವೈಚಾರಿಕ ಸಾಹಿತ್ಯ, ಶಿಶು ಸಾಹಿತ್ಯ, ಅನುವಾದ ಹಾಗೂ ಸಂಶೋಧನಾ ಸಾಹಿತ್ಯ.. ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಅಮೂಲ್ಯವಾದ ಕೃತಿಗಳನ್ನು ರಚಿಸಿದ್ದ ಡಾ. ಕಮಲಾ ಹಂಪನಾ ಅವರು ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಹಾಗೂ ಮೈಸೂರು ವಿಶ್ವವಿದ್ಯಾಲಯ, ಹಂಪಿ ವಿಶ್ವವಿದ್ಯಾಲಯ ಮುಂತಾದ ಕಡೆಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಬಹಳ ದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದಾರೆ”.

”71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು, ನಾಡೋಜ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರ ಇಡೀ ಕುಟುಂಬ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನ ನೀಡುತ್ತಿದೆ. ಭಗವಂತ ಕುಟುಂಬಕ್ಕೆ ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಕನ್ನಡ ಸಾಂಸ್ಕೃತಿಕ ಲೋಕ ಅವರನ್ನು ಸದಾ ಗೌರವಪೂರ್ವಕವಾಗಿ ನೆನಪಿಸಿಕೊಳ್ಳುತ್ತದೆ” ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

”ಆರು ದಶಕಗಳಿಗೂ ಹೆಚ್ಚು ಕಾಲ ಬೋಧನೆ, ಸಂಶೋಧನೆ ಮತ್ತು ಸಾಹಿತ್ಯ ರಚನೆಗಳಲ್ಲಿ ನಿರತರಾಗಿದ್ದ ಕಮಲಾ ಹಂಪನಾ ಅವರು ಮಹಿಳಾ ಸಬಲೀಕರಣ ಮತ್ತು ಸೃಜನಶೀಲತೆಯ ಪ್ರತೀಕದಂತಿದ್ದರು. ಸಾಹಿತ್ಯದಲ್ಲಿ ಒಂದು ಉನ್ನತ ಮಾದರಿಯನ್ನು ‌ನಿರ್ಮಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ” ಎಂದು ಸಚಿವ ಎಂ‌.ಬಿ.ಪಾಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

”ಸಜ್ಜನಿಕೆ ಮತ್ತು ಸುಸಂಸ್ಕೃತಿಗಳ ಸಂಗಮವಾಗಿದ್ದ ಕಮಲಾ ಅವರ ನಿಧನದಿಂದ ಕನ್ನಡ ಸಾಹಿತ್ಯದ ಚೇತನವೊಂದು ಕಣ್ಮರೆಯಾದಂತಾಗಿದೆ. ಪರಮಾತ್ಮನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬದ ಸದಸ್ಯರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ” ಎಂದು ಪ್ರಾರ್ಥಿಸಿದ್ದಾರೆ.

RELATED ARTICLES
- Advertisment -
Google search engine

Most Popular