ಯಾದಗಿರಿ: ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಅಕ್ಕಿ ನಾಪತ್ತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಮಂಗಳವಾರ ಶಹಾಪುರ ಠಾಣೆಯ ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದಾರೆ.
ಟಿಎಪಿಸಿಎಂಎಸ್ನ ೨.೬ ಕೋಟಿ ಮೌಲ್ಯದ ೬,೦೭೭ ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಪುರ ಡಿವೈಎಸ್ಪಿ ಜಾವೇದ್ ಇನಾಂದಾರ್ ತನಿಖೆ ನಡೆಸುತ್ತಿದ್ದಾಗ ಬಂಧಿತ ಆರೋಪಿಗಳು ರಾಜು ರಾಠೋಡ ಹಾಗೂ ಮಣಿಕಂಠ ರಾಠೋಡ ಅವರಿಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದರು. ಹೀಗಾಗಿ ಮಣಿಕಂಠ ರಾಠೋಡ ಅವರನ್ನು ಬಂಧಿಸಲಾಗಿದೆ ಎಂದು ಶಹಾಪುರ ಠಾಣೆಯ ಪಿಐ ಎಸ್.ಎನ್.ಪಾಟೀಲ ಮಾಹಿತಿ ನೀಡಿದರು.