ಮಡಿಕೇರಿ: ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಅಗ್ನಿಶಾಮಕ ಹೀಗೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿ ಉತ್ತಮವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಜಲಾಶಯಗಳು, ಜಲಪಾತಗಳು, ಹಳ್ಳ ಕೊಳ್ಳ, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಇದರಿಂದ ಅಂತರ್ಜಲವು ಸಹ ಹೆಚ್ಚಾಗಿದೆ. ಹೀಗಾಗಿ ಯಾವುದೇ ರೀತಿ ಹಾನಿ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕಳೆದ ೨೦೧೮, ೨೦೧೯, ೨೦೨೦ ರಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಹಾಗಾಗಿ ಮತ್ತಷ್ಟು ಮುನ್ನೆಚ್ಚರ ವಹಿಸಬೇಕು, ಜನ-ಜಾನುವಾರು ರಕ್ಷಣೆಗೆ ಮುಂದಾಗಬೇಕು ಎಂದು ವೆಂಕಟ್ ರಾಜಾ ಅವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ರಸ್ತೆಗಳು, ಸೆಸ್ಕ್ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳು, ಶಾಲಾ-ಕಾಲೇಜು ಕಟ್ಟಡಗಳು, ಸಕರ್?ರಿ ಕಚೇರಿಗಳು, ಮನೆ ಹಾಗೂ ಬೆಳೆ ಹಾನಿ ಹೀಗೆ ವಿವಿಧ ರೀತಿಯ ಹಾನಿಯಾಗಿದ್ದು, ಇದನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾಧಿಕಾರಿ ಅವರು ನೀಡಿದರು.
ಈಗಾಗಲೇ ಹೆಚ್ಚಿನ ಮಳೆಯಾಗಿ ಶ್ರೀಮಂಗಲ-ಕುಟ್ಟ ರಸ್ತೆ, ಶಾಂತಳ್ಳಿ ರಸ್ತೆ ಹೀಗೆ ಹಲವು ರಸ್ತೆಗಳು ಹೆಚ್ಚಿನ ಹಾನಿಯಾಗಿದ್ದು, ಈ ಸಂಬಂದ ಮರಳು, ಜಲ್ಲಿಯನ್ನು ತುಂಬಿ ಸರಿಪಡಿಸುವ ಕಾರ್ಯವಾಗಬೇಕು. ಬ್ಯಾರಿಕೇಡ್ ಅಳವಡಿಸಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸೂಚಿಸಿದರು.
ಸಾರಿಗೆ ಸಂಪರ್ಕದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾದಲ್ಲಿ, ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತಂದು ಪಯರ್?ಯ ಸಾರಿಗೆ ಸಂಪರ್ಕ ಕಲ್ಪಿಸಬೇಕು. ಯಾರಿಗೂ ತೊಂದರೆಯಾಗದಂತೆ ಗಮನಹರಿಸುವುದು ಅತೀಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹೆಚ್ಚಿನ ಗಾಳಿ ಮಳೆಯಿಂದ ಮನೆ ಹಾನಿಯಾದಲ್ಲಿ ಅಥವಾ ಇತರೆ ಸಮಸ್ಯೆಗಳು ಉಂಟಾದಲ್ಲಿ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಈಗಾಗಲೇ ಹೋಬಳಿ ಮಟ್ಟದಲ್ಲಿ ನಿಯೋಜಿಸಿರುವ ನೋಡಲ್ ಅಧಿಕಾರಿಗಳು ವಿವಿಧ ರೀತಿಯ ಹಾನಿ ಮತ್ತಿತರ ಸ್ಥಿತಿಗತಿ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು. ಕಾರ್ಯವಿದ್ದಲ್ಲಿ ನೇರವಾಗಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲೆಯ ಹಲವು ಕಡೆಗಳಲ್ಲಿ ಶಾಲಾ ಕಟ್ಟಡಕ್ಕೆ ಹಾನಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪೌರಾಡಳಿತ ಇಲಾಖೆಯ ಎಇಇ ಹೇಮಂತ್ ಕುಮಾರ್ ಅವರು ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ಬಿರುಗಾಳಿ ಮಳೆಗೆ ಹೆಚ್ಚಿನ ಮನೆಗಳು ಹಾನಿಯಾಗುತ್ತಿದ್ದು, ಇಂತಹ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಜೊತೆಗೆ ಟಾರ್ಪಲ್ ವಿತರಣೆ ಮಾಡಲಾಗುತ್ತಿದೆ ಎಂದರು. ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಪಂಚಾಯತ್ ರಾಜ್ ಎಂಜಿನಿಯರ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ನವೀನ್ ಕುಮಾರ್, ರಾಮಚಂದ್ರ ಹಾಗೆಯೇ ತಾ.ಪಂ.ಇಒ ಗಳಾದ ಶೇಖರ್, ಅಪ್ಪಣ್ಣ, ಇತರರು ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ , ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಬಸಪ್ಪ, ಐಟಿಡಿಪಿ ಇಲಾಖೆ ಅಧಿಕಾರಿ ಹೊನ್ನೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ರಂಗಧಾಮಪ್ಪ, ಮಂಜುಳ, ಪೌರಾಯುಕ್ತರಾದ ವಿಜಯ್, ಇತರರು ಹಲವು ಮಾಹಿತಿ ನೀಡಿದರು.