ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ/ಪ್ರವಾಹದ ಸಂಭವದ ಹಿನ್ನೆಲೆಯಲ್ಲಿ ಶುಕ್ರವಾರ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ 26) ಖಾನಾಪುರ ತಾಲೂಕಿನ ಅತಿವೃಷ್ಟಿ ಹಾಗೂ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಾಂಬೋಟಿ ರಸ್ತೆಯ ಕುಸುಮಳ್ಳಿ ಸೇತುವೆ, ಖಾನಾಪುರದಿಂದ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮಧ್ಯದಲ್ಲಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಸ್ಥಿತಿಗತಿ ವೀಕ್ಷಿಸಿದರು. ನಂತರ ಖಾನಾಪುರ ಪ್ರವಾಸಿ ಮಂದಿರದಲ್ಲಿ ವಿವಿಧ ಗ್ರಾಮಗಳ ಜನರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಲಪ್ರಭಾ ನದಿಯ ಹಿರೇಹಟ್ಟಿಹೊಳಿ ಗ್ರಾಮದ ಜನರು ಸಚಿವರನ್ನು ಭೇಟಿ ಮಾಡಿ, ಇಡೀ ಗ್ರಾಮ ಜಲಾವೃತವಾಗಿರುವುದರಿಂದ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.
ಹಿರೇಹಟ್ಟಿಹೊಳಿ ಪ್ರತಿ ವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುವುದರಿಂದ ಗ್ರಾಮಸ್ಥರಿಗೆ ವೈದ್ಯಕೀಯ ಸೌಲಭ್ಯ, ಶಿಕ್ಷಣ ಮತ್ತಿತರ ಮೂಲಸೌಕರ್ಯಗಳು ಸಿಗುತ್ತಿಲ್ಲ; ಹೀಗಾಗಿ ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಚಿವರು ಒತ್ತಾಯಿಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
15 ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಸಿದ್ಧ: ಖಾನಾಪುರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಖಾನಾಪುರ ತಾಲೂಕಿನ ಕಾಡಂಚಿಯ 15 ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಇಲ್ಲವೇ ಅಲ್ಲಿನ ಜನರನ್ನು ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಹೊಸ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಇಂತಹ ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಜನರು ವಾಸಿಸುತ್ತಿದ್ದಾರೆ. ಈ ಕುರಿತು ಈಗಾಗಲೇ ಅರಣ್ಯ ಸಚಿವರು ಹಾಗೂ ಸ್ಥಳೀಯ ಶಾಸಕರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಇಲ್ಲಿನ ಸ್ಥಳೀಯ ಸ್ಥಿತಿಗತಿಗಳನ್ನು ವಿವರಿಸಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದರು.
ಇತ್ತೀಚೆಗೆ ಕಾಡಂಚಿಯ ಅಮಗವ್ವ ಗ್ರಾಮದಲ್ಲಿ ಮಹಿಳೆಯೊಬ್ಬರು ಆರೋಗ್ಯ ಸಮಸ್ಯೆಯಿಂದ ಮೃತಪಟ್ಟ ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಸೇರಿಸಲು ವಾಹನ ವ್ಯವಸ್ಥೆ, ಆಂಬ್ಯುಲೆನ್ಸ್ ಗೆ ಸರಿಯಾದ ರಸ್ತೆ ಇಲ್ಲ, ನೆಟ್ ವರ್ಕ್ ಸಮಸ್ಯೆ ಇದೆ. ಅದೇ ರೀತಿ ಪಡಿತರ ಸಿಗದೇ ಕಾಡಂಚಿನ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಶೇ. 80 ಜನ ಒಪ್ಪಿದರೆ ಬೇರೆಡೆಗೆ ಸ್ಥಳಾಂತರಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಖಾನಾಪುರದ ಹಲವು ಹಳೆಯ ಸೇತುವೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನಗಳನ್ನು ತಡೆದರು. ಇನ್ನೂ ಖಾನಾಪುರದಿಂದ ಗೋವಾ ರಾಜ್ಯದ ಗಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಮತ್ತು ಸೇತುವೆಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಮಳೆಗಾಲ ಮುಗಿದ ನಂತರ ಹೊಸ ಸೇತುವೆ ನಿರ್ಮಾಣಕ್ಕೆ ಸೂಚನೆ ನೀಡಲಾಗುವುದು. ಜಿಲ್ಲೆಯಲ್ಲಿ ಪ್ರವಾಹ ಅಷ್ಟೊಂದು ಅಪಾಯಕಾರಿ ಅಲ್ಲ. ಪ್ರಸ್ತುತ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಜಿಲ್ಲಾಧಿಕಾರಿ ಮಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಭೀಮಾಶಂಕರ ಇದ್ದರು
