ರಾಮನಗರ: ಜಿಲ್ಲಾ ಮಟ್ಟದಲ್ಲಿ ಇದೇ ಆ. ೧೫ ರಂದು ಆಚರಿಸಲಾಗುವ ೭೮ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ನಿರ್ದೇಶನ ನೀಡಿದರು.
ಅವರು ಆ. ೫ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆ. ೧೫ ರಂದು ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆ. ೧೫ ರಂದು ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು, ಅಂದು ಬೆಳಗ್ಗೆ ೯ ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರಿಗೆ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಎನ್ಸಿಸಿ ಕೆಡೆಟ್ಸ್ ಗಳು, ಪೊಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಸಿಕೊಡಲು ಕ್ರಮ ವಹಿಸಿ ಎಂದರು.
ಕಾರ್ಯಕ್ರಮದ ಸಿದ್ದತೆ ಕುರಿತು ಕ್ರೀಡಾಂಗಣದ ಸ್ವಚ್ಚತೆ, ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ನಾಡು ನುಡಿ ಮಹತ್ವ ಬಿಂಬಿಸುವ ನಾಡಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಬೇಕು ಎಂದರು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಡಚಣೆಯಾಗದಂತೆ ಬೆಸ್ಕಾಂನವರು ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಏರ್ಪಡಿಸಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಅವರು ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ತಂಡವನ್ನು ಸಿದ್ದಪಡಿಸಿಕೊಳ್ಳಬೇಕು ಹಾಗೂ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಬಹಳ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನೆರವೇರಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಕಚೇರಿಗಳು, ಶಾಲಾ ಕಾಲೇಜುಗಳ ಮುಂದೆ ಅಂದು ಬೆಳಿಗ್ಗೆ ೮ ಗಂಟೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದು ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು, ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸ್ವಾತಂತ್ರ?ಯ ದಿನಾಚರಣೆ ನಿಮಿತ್ತ ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಂದು ಬೆಳಿಗ್ಗೆ ೮:೪೫ಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದರು. ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.