ಬೆಂಗಳೂರು: ಹೈಕೋರ್ಟ್ ಛಾಟಿ ಏಟಿನಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಶೌಚಾಲಯಗಳ ನಿರ್ಮಾಣಕ್ಕಾಗಿ 200 ಕೋಟಿ ಅನುದಾನವನ್ನು ಘೋಷಣೆ ಮಾಡಿದೆ.ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಡಿಸಿದ ಬಜೆಟ್ನಲ್ಲಿ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯದ ದೃಷ್ಟಿಯಿಂದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕಡಿಮೆ ಶೌಚಾಲಯ ಹೊಂದಿರುವ 5575 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ನರೇಗಾ ಯೋಜನೆಯ ಸಂಯೋಗದೊಂದಿಗೆ ಶೌಚಾಲಯ ಘಟಕಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.
ಸರ್ಕಾರಿ ಶಾಲಾಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗೆ 310 ಕೋಟಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ 240 ಕೋಟಿ ಸೇರಿದಂತೆ 550 ಕೋಟಿ ವೆಚ್ಚದಲ್ಲಿ 8311 ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಆಶ್ವಾಸನೆ ನೀಡಿದ್ದಾರೆ.
ಶಿಕ್ಷಣವು ಬಾಂಧವ್ಯ, ಭಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯನ್ನು ಮೂಡಿಸುವಂತಿರಬೇಕು. ಇದಕ್ಕೆ ವಿರುದ್ಧವಾಗಿ ಹಿಂದಿನ ಸರ್ಕಾರ ಪಠ್ಯಗಳನ್ನು ಸೇರ್ಪಡೆಗೊಳಿಸಿದ್ದು ಅದನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ತೀರ್ಮಾನಿಸಲಾಗಿದೆ ಎಂದರು.ಮಳೆಯಿಂದಾಗಿ ಶಿಥೀಲೀಕರಣಗೊಂಡಿರುವ 3833 ಶಾಲೆಗಳು ಮತ್ತು 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು ನೂರು ಕೋಟಿ ವೆಚ್ಚದಲ್ಲಿ ದುರಸ್ತಿಗೊಳಿಸುವುದಾಗಿ ತಿಳಿಸಿದ್ದಾರೆ.