ಬೆಂಗಳೂರು: ಹತ್ತು ವರ್ಷಗಳ ನಂತರ ತೊಗರಿನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ. ಸೆಪ್ಟೆಂಬರ್ 17ರ ಸಂಜೆ 4 ಕ್ಕೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಸರ್ಕಾರದ ಸಚಿವಾಲಯ ತಿಳಿಸಿದೆ.
ಈ ಮೊದಲು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲೇ ಹೆಚ್ಚಿನ ಸಚಿವ ಸಂಪುಟ ಸಭೆಗಳನ್ನು ನಡೆಸಿದ್ದರು. ಈ ಹಿಂದೆ ದೇವರಾಜು ಅರಸು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಸಂಪ್ರಾದಾಯಕ್ಕೆ ನಾಂದಿ ಹಾಡಿದ್ದರು.
ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಪ್ರಾದೇಶಿಕ ಅಸಮಾನತೆ ನಿವಾರಣೆ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಬೆಂಗಳೂರಿನಿಂದ ಬೇರೆಡೆಗೆ ವಿಕೇಂದ್ರಿಕರಣಗೊಳಿಸು ಕುರಿತು ಹಲವು ಚರ್ಚೆಗಳು ನಡೆದಿವೆ. ಅದರ ಭಾಗವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಲಾಗಿದ್ದು, ವರ್ಷಕ್ಕೊಮೆ ವಿಧಾನಮಂಡಳ ಅಧಿವೇಶನ ನಡೆಸಲಾಗುತ್ತಿದೆ.