ಮೈಸೂರು: ಶತಮಾನಗಳಿಂದಲೂ ಶೋಷಣೆಗೆ ಒಳಗಾಗಿರುವ ದಲಿತ ಸಮುದಾಯವನ್ನು ಅವಹೇಳನ ಮಾಡಿರುವ ಶಾಸಕ ಮುನಿರತ್ನ ಅವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕೆಂದು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಾದ್ಯಮ ವಕ್ತಾರ ಪಿ. ರವಿ ಪ್ರಕಾಶ್ ಆಗ್ರಹಿಸಿದ್ದಾರೆ.
ಎಲ್ಲಾ ವರ್ಗಗಳ ಜನ ಸಮುದಾಯದಿಂದ ಮತಗಳನ್ನು ಪಡೆದು ಶಾಸಕರಾಗಿರುವ ಇವರು ದಲಿತ ಸಮುದಾಯದ ವ್ಯಕ್ತಿಯ ಬಗ್ಗೆ ಬಹಳ ಕೆಟ್ಟದಾಗಿ ಮಾತಾಡುವ ಮೂಲಕ ತನ್ನ ಯೋಗ್ಯತೆ, ಸಂಸ್ಕೃತಿ ಹಾಗೂ ಮನಸ್ಥಿತಿ ಎಂತಹದ್ದು ಎಂಬುದನ್ನು ತೋರಿಸಿದ್ದಾರೆ. ಅಲ್ಲದೇ ಮತ್ತೊಂದು ಸಮುದಾಯದ ಹೆಣ್ಣಿನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುವ ಮೂಲಕ ಹೆಣ್ಣು ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ವ್ಯಕ್ತಿ, ಸಮಯದಾಯದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಅದನ್ನು ಬಿಟ್ಟು ದುರಹಂಕಾರದಿಂದ ಆಡಿರುವ ಈ ಮಾತುಗಳೇ ಮುಂದೊಂದು ದಿನ ತಕ್ಕ ಪಾಠ ಕಲಿಸುವುದರಲ್ಲಿಸಂದೇಹವಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಕೂಡಲೇ ರಾಜ್ಯಪಾಲರು ಹಾಗೂ ವಿಧಾನಸಭಾಧ್ಯಕ್ಷರು ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಕಾನೂನು ರೀತಿ ಕ್ರಮವಹಿಸುವಂತೆ ಒತ್ತಾಯ ಮಾಡಿದ್ದಾರೆ.