ಮೈಸೂರು ಜಿಲ್ಲಾ ಗ್ರಾಮಾಂತರ ಪರಿಶಿಷ್ಟ ವಿಭಾಗದಿಂದ ಸಿಎಂ, ಡಿಸಿಎಂಗೆ ಮನವಿ
ಮೈಸೂರು: ರಾಜ್ಯದ ಎಲ್ಲಾ ಸಮಯದಾಯಗಳಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ನ್ಯಾಯ ಮತ್ತು ಮೂಲಸೌಕರ್ಯ ಸಿಗಬೇಕಾದರೆ ಕಾಂತರಾಜು ಆಯೋಗದ ಜಾತಿ ಗಣತಿ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಮಾಧ್ಯಮ ವಕ್ತಾರ ಹಾಗೂ ಉಪಾಧ್ಯಕ್ಷ ಪಿ. ರವಿಪ್ರಕಾಶ್ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರಿಕೆ ಹೇಳಿಕೆ ನೀಡಿರುವ ಅವರು, ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಮಾತಿಗೆ ಮನ್ನಣೆ ನೀಡದೇ, ಅ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾರಿ ಮಾಡುವ ನಿರ್ಧಾರವನ್ನು ಕೈಗೊಳ್ಳಬೇಕು. ಇದರಿಂದ ಹಿಂದಳಿದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜತೆಗೆ ಸರ್ಕಾರದ ಯೋಜನೆಗಳು ಜನಸಂಖ್ಯೆಗೆ ಅನುಗುಣವಾಗಿ ರೂಪುಗೊಳ್ಳಲಿವೆ. ಈ ವರದಿಯಿಂದ ಕೇವಲ ಪರಿಶಿಷ್ಟ ಜಾತಿಗಷ್ಟೇ ಅನುಕೂಲವಾಗುವುದಿಲ್ಲ, ಬದಲಾಗಿ ಹಿಂದುಳಿದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಹಾಗಾಗಿ, ವೈಜ್ಞಾನಿಕವಾಗಿ ನಡೆದಿರುವ ಜಾತಿ ಗಣತಿ ವರದಿಯನ್ನು ಸರ್ಕಾರ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದ್ದಾರೆ.
ಕೆಲವು ಬಲಾಡ್ಯ ಸಮುದಾಯದ ಮುಖಂಡರು ಈ ಜಾತಿ ಗಣತಿ ವರದಿ ಬಗ್ಗೆ ಸ್ಪಷ್ಟ ಮಾಹಿತಿ ತಿಳಿಯದ ಕಾರಣ ಇದನ್ನು ವಿರೋಧಿಸುತ್ತಿದ್ದಾರೆ. ಹಾಗಾಗಿ, ಸಾಮಾಜಿಕ ಸಮಾತೋಲನದಲ್ಲಿ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಯಾರ ಮಾತಿಗೂ ಕಿವಿಗೊಡದೆ ಈ ವರದಿಯನ್ನು ಜಾರಿಗೆ ತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.