ಬೆಂಗಳೂರು: ಕಾಂಗ್ರೆಸ್ಸಿನ ಬೆಳವಣಿಗೆಗಳು, ನಾಯಕರ ಒಳ ಸಭೆಗಳು ಸಿಎಂ ಕುರ್ಚಿಗೆ ಆಪತ್ತು ತರುತ್ತದೆ ಎಂದು ಅನಿಸುತ್ತದೆ. ಬೆಳಗಾವಿಯ ಅಧಿವೇಶನ ಹೊಸ ಮುಖ್ಯಮಂತ್ರಿಯೊಂದಿಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆಯೇ ಸೋಲಿನ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ತನ್ನ ಸ್ಥಾನಕ್ಕೆ ಚ್ಯುತಿ ಬರುವ ಭಾವನೆಯನ್ನು ಕಣ್ಮುಂದೆ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರು ‘ನಮ್ಮ ಶಾಸಕರನ್ನು ಬಿಜೆಪಿಯವರು ಖರೀದಿಸುತ್ತಿದ್ದಾರೆ’ ಎಂಬ ಹುಸಿ ಸುಳ್ಳನ್ನು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಬದಲಿಸಲಿದೆ ಎಂಬಂಥ ಬೆಳವಣಿಗೆ ನಡೆಯುತ್ತಿರುವಂತಿದೆ ಎಂದರು.
ಮೂಡ ಹಗರಣ, ವಾಲ್ಮೀಕಿ ಹಗರಣದಲ್ಲಿ ಶಾಸಕರ ನಡುವಿನ ದೊಡ್ಡ ಪ್ರಮಾಣದ ಅಸಮಾಧಾನಗಳು ಸ್ಫೋಟಗೊಳ್ಳುತ್ತದೆ; ತನ್ನ ಕುರ್ಚಿಗೆ ಅಪಾಯ ಇದೆ ಎಂಬುದನ್ನು ಅರ್ಥ ಮಾಡಿಕೊಂಡು, ಪರೋಕ್ಷವಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಈ ರೀತಿಯ ೫೦ ಕೋಟಿಯ ಆಫರ್ಗಳನ್ನು ತಮ್ಮ ಶಾಸಕರ ಮೇಲೆ ಹೇಳುತ್ತಿದ್ದಾರೆ ಎಂದು ಅನಿಸುತ್ತಿದೆ. ಸರಕಾರ ಬಂದು ೨ ವರ್ಷಗಳಾಗುತ್ತಿರುವ ಸಂದರ್ಭದಲ್ಲಿ, ಯಾವುದೇ ಅನುದಾನವಿಲ್ಲದೆ ಅಭಿವೃದ್ಧಿಯ ಚಟುವಟಿಕೆಗಳು ಸಂಪೂರ್ಣ ನಾಶವಾಗಿರುವ ಸಂದರ್ಭದಲ್ಲಿ ಆಡಳಿತ ಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಬೇರೆ ಬೇರೆ ಗುಂಪುಗಳಲ್ಲಿ ಸಭೆ ನಡೆಸುತ್ತಿದ್ದಾರೆ ಎಂಬುದನ್ನು ಸಿಎಂ ಕಚೇರಿ ಗಮನಿಸುತ್ತಿದೆ ಎಂದು ವಿವರಿಸಿದರು.