ಮಂಗಳೂರು(ದಕ್ಷಿಣ ಕನ್ನಡ): ಯುವಕನೊಬ್ಬ ಹೊಸ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಶಬೀರ್ , ಅನೀಶ್, ಸಲೀಂ ಎಂಬುವವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.
ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.