ಮಂಗಳೂರು(ದಕ್ಷಿಣ ಕನ್ನಡ): ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವುದು ಕಾಂಗ್ರೆಸ್ ಪಕ್ಷದ ನಿಲುವು. ಅದರಂತೆ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಜಾತಿ ಜನಗಣತಿ ಜಾರಿಗೆ ಮುಂದಾಗಿದೆ. ಇದಕ್ಕೆ ವಿಪಕ್ಷಗಳಿಂದ ವಿರೋಧ ಸರಿಯಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಆಶಯ ಪ್ರತಿಬಿಂಬಿಸುವ ನಿಟ್ಟಿನಲ್ಲಿ ಕಾಂತರಾಜು ಮತ್ತು ಜಯಪ್ರಕಾಶ್ ಹೆಗ್ಡೆಯವರ ಜಾತಿ ಜನಗಣತಿ ಜಾರಿಗೆ ಪ್ರಯತ್ನ ನಡೆಯುತ್ತಿದೆ. ವರದಿಯ ದತ್ತಾಂಶಗಳಲ್ಲಿ ನ್ಯೂನ್ಯತೆ ಇದ್ದಲ್ಲಿ ಅದನ್ನು ಸರಿಪಡಿಸಬಹುದು. ಆದರೆ ವರದಿ ಜಾರಿಯೇ ಬೇಡವೆನ್ನುವುದು ಸಮಂಜಸವಲ್ಲ ಎಂದವರು ಹೇಳಿದರು.
ಜಯಪ್ರಕಾಶ್ ಹೆಗ್ಡೆ ಆಯೋಗವನ್ನು ಬಿಜೆಪಿ ಇದ್ದಾಗ ನೇಮಕ ಮಾಡಲಾಗಿತ್ತು. ದತ್ತಾಂಶ ಸರಿ ಇಲ್ಲ ಎಂಬ ವಾದಕ್ಕೆ ಈಗಾಗಲೇ ಆಯೋಗದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ. ಬಹುಜನರಿಗೆ ಅನುಕೂಲ ಆಗುವುದು, ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಬೇಕಾಗಿರುವುದು ಅತೀ ಅಗತ್ಯ ಎಂದು ಅವರು ಹೇಳಿದರು.