ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು- ಮುಡಿಪು ಮಾರ್ಗವಾಗಿ ಸಂಚರಿಸುವ ಸರಕಾರಿ ಬಸ್ಸೊಂದರಲ್ಲಿ ನಿದ್ದೆಗೆ ಜಾರಿದ್ದ ಪ್ರಯಾಣಿಕೆಯಾಗಿದ್ದ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ಬಸ್ ಕಂಡಕ್ಟರ್ ನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್, ಆರೋಪಿತ ಬಸ್ ಕಂಡಕ್ಟರ್. ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಆರೋಪಿ ಬಸ್ ನಿರ್ವಾಹಕ ಪ್ರದೀಪ್ ಪ್ರಯಾಣದ ವೇಳೆ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳನ್ನು ದೇಹದ ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.