ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಬಾಗಲೂರು ರಸ್ತೆಯ ಕೆಐಎಡಿಬಿ ಜಂಕ್ಷನ್ನಲ್ಲಿ ನಡೆದಿದೆ.
ನಂದಿನಿ(24) ಮೃತ ಯುವತಿ. ನೆಲಮಂಗಲದ ಹುಸ್ಕೂರು ಗ್ರಾಮದ ನಂದಿನಿ ಏರೋನಾಟಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿದ ಬಳಿಕ ಬಾಗಲೂರಿನ ಪಿಜಿಯಲ್ಲಿ ವಾಸವಾಗಿದ್ದರು.
ಮೂಲಗಳ ಪ್ರಕಾರ, ನಂದಿನಿ ಅವರು ಕೆಲಸ ಮುಗಿಸಿ ತಮ್ಮ ಪಿಜಿಗೆ ಮೋಟಾರ್ ಸೈಕಲ್ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಎದುರಿನಿಂದ ವೇಗವಾಗಿ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಅವರು ರಸ್ತೆಯ ಮೇಲೆಯೇ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು ಚಿಕ್ಕಜಾಲ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಫಾರ್ಚುನರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.