ವರದಿ: ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಉಪಯೋಗ ಪಡೆದುಕೊಂಡ ಹಿನ್ನೆಲೆ ಪಿರಿಯಾಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಬಸ್ ನಲ್ಲಿ ಸಾಂಕೇತಿಕವಾಗಿ ಪ್ರಯಾಣಿಸುವ ಮೂಲಕ ಶುಭ ಕೋರಿ ಮಾತನಾಡಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಶಕ್ತಿ ಯೋಜನೆಯಲ್ಲಿ ಕರ್ನಾಟಕದಾದ್ಯಂತ 500 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದು ಅದರಂತೆ ಇತರೆ ಯೋಜನೆಗಳಿಗು ಸಹ ಜನಪರ ಪ್ರಶಂಸೆ ವ್ಯಕ್ತವಾಗುತ್ತಿದೆ, ನಮ್ಮ ಸರ್ಕಾರ ಇರುವರೆಗೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ,2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭ ಸಾರಿಗೆ ಘಟಕ ವ್ಯವಸ್ಥಾಪಕರಾದ ದರ್ಶನ್ ರಾಮಚಂದ್ ಮತ್ತು ಸಿಬ್ಬಂದಿ ಸೇರಿದಂತೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಇದ್ದರು.