ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬಳಿಯ ಗಾಜನೂರು ಸಮೀಪದ ಅರಣ್ಯದಲ್ಲಿ ಇತ್ತೀಚೆಗೆ ನಡೆದ ಐದು ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಮಲೆ ಮಹದೇಶ್ವರ ವನ್ಯ ಜೀವಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ವೈ.ಚಕ್ರಪಾಣಿ ಯವರನ್ನು ರಾಜ್ಯ ಸರಕಾರ ಅಮಾನತು ಮಾಡಿ ಆದೇಶಿಸಿದೆ.
ಹುಲಿಗಳ ಸಾವಿನ ಬಗ್ಗೆ ತನಿಖೆಗೆ ಸರಕಾರ ರಚಿಸಿದ್ದ ಉನ್ನತ ಮಟ್ಟದ ತನಿಖಾ ಸಮಿತಿ ನೀಡಿರುವ ಶಿಫಾರಸಿನ ಆಧಾರದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಚಕ್ರ ಪಾಣಿಯರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು ಅರಣ್ಯ ಇಲಾಖಾ ವಿಚಾರಣೆ ಬಾಕಿ ಇರಿಸಲಾಗಿದೆ.
ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಸಿಬ್ಬಂದಿಗೆ ಮಾರ್ಚ್ ನಿಂದ ಮೇ ತಿಂಗಳವರೆಗೆ ವೇತನ ಬಿಡುಗಡೆ ಮಾಡದಿರುವುದು, ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕಾಗಿ ಆಗ್ರಹಿಸಿ ಜೂನ್ 23ರಂದು ಕಳ್ಳಬೇಟೆ ತಡೆ ಶಿಬಿರದ ವಾಚರ್ ಗಳು ಕೊಳ್ಳೇಗಾಲದ ವಿಭಾಗೀಯ ಕಚೇರಿ ಎದುರು ಧರಣಿ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.
ಅಮಾನತುಗೊಂಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಚಕ್ರಪಾಣಿ ಕೇಂದ್ರಸ್ಥಾನ ತೊರೆಯುವಂತಿಲ್ಲ ಎಂದೂ ತಿಳಿಸಲಾಗಿದೆ.