ಹಾಸನ: ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಈ ದುರಂತದ ನಂತರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಡರಾತ್ರಿ ಹಾಸನ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿ ಧೈರ್ಯ ತುಂಬಿದರು.
ನಿಖಿಲ್ ಕುಮಾರಸ್ವಾಮಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ, ಅವರ ನೋವಿಗೆ ತಮ್ಮತದೆ ಆದ ಭಾವನಾತ್ಮಕ ಪ್ರತಿಕ್ರಿಯೆ ನೀಡಿದರು. “ಈ ದುರ್ಘಟನೆ ಯಾರಿಗೂ ಊಹಿಸಲಾಗದ ಘಟ್ಟ. ಪೋಷಕರ ಕನಸುಗಳು ಮಣ್ಣುಪಾಲಾಗಿವೆ. ಅವರ ಸ್ಥಿತಿಯನ್ನು ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲ,” ಎಂದು ಹೇಳಿದರು. ತಾಯಿ ಚಾಮುಂಡೇಶ್ವರಿ ಈ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂತಹ ಘಟನೆಗಳಲ್ಲಿ ಜೀವಕ್ಕೆ ಬೆಲೆ ಕಟ್ಟಲಾಗದು. ಮುಖ್ಯಮಂತ್ರಿಗಳು ಘೋಷಿಸಿರುವ ₹5 ಲಕ್ಷ ಪರಿಹಾರವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಪರಿಹಾರ ಘೋಷಣೆ ಮಾಡುವ ಅಗತ್ಯವಿದೆ,” ಎಂದು ಸರ್ಕಾರವನ್ನು ಮನವಿ ಮಾಡಿದರು.
ಘಟನೆಯ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂಬ ನಿಖಿಲ್ ಅವರ ಒತ್ತಾಯ ಕೂಡ ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್, ಹೆಚ್.ಟಿ. ಮಂಜು ಸೇರಿದಂತೆ ಹಲವಾರು ಮುಖಂಡರು ನಿಖಿಲ್ ಅವರಿಗೆ ಸಾಥ್ ನೀಡಿದರು.