- ಉತ್ತಮ ಕಾರ್ಯಕ್ರಮ ಆಯೋಜಿಸುವ ಗ್ರಾಪಂಗಳಿಗೆ ಪ್ರಶಸ್ತಿ
ಬಳ್ಳಾರಿ: ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಇದೇ ನಾಳೆ ಸೆ.17 ರಿಂದ ಅ.02 ರವರೆಗೆ ‘ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆ ಮತ್ತು ಶುಚಿತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಕೇAದ್ರ ಜಲಶಕ್ತಿ ಮಂತ್ರಾಲಯ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು ಇವರ ನಿರ್ದೇಶನದಂತೆ ಪ್ರತಿ ವರ್ಷದಂತೆ ಈ ವರ್ಷವು ಸಹ ‘ಸ್ವಚ್ಛೋತ್ಸವ’ ಧ್ಯೇಯವಾಕ್ಯದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವು ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಮತ್ತು ವೈಯಕ್ತಿಕ ಸ್ವಚ್ಛತೆ, ಗ್ರಾಮದ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಜಲ-ಮೂಲಗಳ ಸುತ್ತ-ಮುತ್ತ ಸ್ವಚ್ಛತೆ ಕಾಯ್ದುಕೊಳ್ಳಲು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುವುದೇ ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ತಾಲ್ಲೂಕು ಪಂಚಾಯತಿಯ ಕಚೇರಿ, ಶಾಲೆ, ಅಂಗನವಾಡಿ, ಆರೋಗ್ಯ ಕೇಂದ್ರ ಮುಂತಾದ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕ ಸ್ಥಳ, ಕಸದಿಂದ ಕೂಡಿರುವ ಸ್ಥಳವನ್ನು ಸ್ವಚ್ಛತೆಗೊಳಿಸಿ, ಕಸ ಎಸೆಯದಂತೆ ರಂಗೋಲಿ ಹಾಕಿ ಸುಂದರ ಸ್ಥಳವನ್ನಾಗಿ ಬದಲಾಯಿಸಲಾಗುತ್ತದೆ. ಉತ್ತಮ ಕಾರ್ಯಕ್ರಮ ಆಯೋಜಿಸುವ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಜಿಪಂ ಸಿಇಒ ಅವರು ತಿಳಿಸಿದ್ದಾರೆ.
ಕಸ ಹೊಂದಿರುವ ಸ್ಥಳ ಗುರುತಿಸಿ ಸ್ವಚ್ಛಗೊಳಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಶಾಲೆ, ಅಂಗನವಾಡಿ ಸರ್ಕಾರಿ ಕಚೇರಿಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛಗೊಳಿಸುವುದು. ಗ್ರಾಮದ ಸ್ವಚ್ಛತೆಯಲ್ಲಿ ತೊಡಗುವ ಸ್ವಚ್ಛತಾ ಸಿಬ್ಬಂದಿಯವರಿಗೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ, ಆರೋಗ್ಯ ತಪಾಸಣೆ ಮಾಡಿಸುವುದು. ಅವರಿಗೆ ಆತ್ಮ ಗೌರವ ಕಾರ್ಡ್ ಗಳನ್ನು ನೀಡಿ ಪ್ರೋತ್ಸಾಹ ನೀಡುವುದು, ಏಕಬಳಕೆಯ ಪ್ಲಾಸ್ಟಿಕ್ ತ್ಯಜಿಸಿ, ಮರುಬಳಕೆ ವಸ್ತುಗಳನ್ನು ಬಳಸುವುದು ಮತ್ತು ಬಟ್ಟೆ ಚೀಲಗಳನ್ನು ಉಪಯೋಗಿಸುವಂತೆ ಪ್ರೇರಣೆ ನೀಡುವುದಾಗಿದೆ.
ಪರಿಸರ ಸ್ನೇಹಿ ಹಬ್ಬಗಳನ್ನು ಆಚರಣೆಗೆ ಉತ್ತೇಜಿಸುವಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿಶೇಷವಾಗಿ ಸೆ.25 ರಂದು ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಎನ್ನುವ ಪ್ರೇರಣೆಯೊಂದಿಗೆ ಎಲ್ಲರೂ ಒಂದುಗೂಡಿ ಕುಡಿಯುವ ನೀರಿನ ಮೂಲಗಳ ಸುತ್ತ-ಮುತ್ತ, ಸಾರ್ವಜನಿಕ ಸ್ಥಳ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಶ್ರಮದಾನ ಮಾಡುವುದು. ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನದ ಮಾಹಿತಿಯನ್ನು ಐಟಿ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ಗ್ರಾಮ ಪಂಚಾಯತಿ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಯುವಕರು, ಸಂಜೀವಿನಿ ಯೋಜನೆಯ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರು, ನರೇಗಾ ಕೂಲಿ ಕಾರ್ಮಿಕರ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಲು ಗ್ರಾಮ ಪಂಚಾಯತಿಗಳಿಗೆ ನಿರ್ದೇಶನ ನೀಡಲಾಗಿದ್ದು, ಪ್ರತಿಯೊಬ್ಬರೂ ಆಂದೋಲನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮನವಿ ಮಾಡಿದ್ದಾರೆ.