ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ನವೆಂಬರ್ ತಿಂಗಳಿನಲ್ಲಿ ಯಾವ ಕ್ರಾಂತಿಯೂ ಆಗುವುದಿಲ್ಲ, ಭ್ರಾಂತಿಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಕೊಪ್ಪಳ ತಾಲ್ಲೂಕಿನ ಬಸಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಮಂಗಳವಾರ ಪೂರ್ಣಗೊಳ್ಳುವ ವಿಶ್ವಾಸವಿದೆ. ಒಂದು ವೇಳೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಆದರೂ ಮಂಗಳವಾರ ಸಂಜೆವರೆಗೆ ಕಾದು ನೋಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ 97 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಉಳಿದ ಜಿಲ್ಲೆಗಳಲ್ಲೂ ಚುರುಕಾಗಿದೆ ಎಂದರು.
ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಕಾರ್ಖಾನೆ ವಿಸ್ತರಣೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಕಾರ್ಖಾನೆಗಾಗಿ ಜಮೀನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.