ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ನಡೆದ ಬಾಂಬ್ ಸ್ಫೋಟದ ಬಳಿಕ ರಾಜ್ಯದಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಜನನಿಬಿಡ ಪ್ರದೇಶಗಳು, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು ಮತ್ತು ಮೆಟ್ರೋ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ಆರಂಭಿಸಿದ್ದಾರೆ. ಶ್ವಾನದಳ ಮತ್ತು ಬಾಂಬ್ ಪತ್ತೆ ದಳಗಳು ಪ್ರತಿಯೊಂದು ಮೂಲೆಯಲ್ಲೂ ಪರಿಶೀಲನೆ ನಡೆಸಿ, ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಮೇಲೆ ನಿಗಾ ವಹಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಗಳ ಗಸ್ತು ಹೆಚ್ಚಿಸಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಿ ವಾಹನಗಳ ತಪಾಸಣೆ ನಡೆಯುತ್ತಿದೆ. ದೆಹಲಿಯಲ್ಲಿ ಸಂಚಾರಿ ದೀಪದ ಬಳಿ ನಿಂತಿದ್ದ ಕಾರು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹೊಸ ಮಾದರಿಯ ದುಷ್ಕೃತ್ಯಗಳ ಸಂಚು ಕುರಿತು ಪೊಲೀಸರು ಎಚ್ಚರಗೊಂಡಿದ್ದಾರೆ. ವಿದೇಶಗಳಲ್ಲಿ ಕಂಡುಬರುವ ರೀತಿಯ ಅಪಾಯಕಾರಿ ಸಂಚುಗಳು ಇದೀಗ ಭಾರತದಲ್ಲೂ ಕಾಣಿಸಿಕೊಂಡಿರುವುದು ಸವಾಲು ತಂದಿದೆ.
ಸಿಸಿಟಿವಿಗಳ ಮೂಲಕ ಅನುಮಾನಾಸ್ಪದ ವಾಹನಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ. ರಜೆಯಲ್ಲಿದ್ದ ಸಿಬ್ಬಂದಿಯನ್ನು ಕರೆಯಿಸಿಕೊಂಡು ಭದ್ರತೆಗೆ ನಿಯೋಜಿಸಲಾಗಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್, ಸಿಎಆರ್ ಹಾಗೂ ಇತರ ದಳಗಳನ್ನು ಸೂಕ್ಷ್ಮ ಪ್ರದೇಶಗಳಿಗೆ ನಿಯೋಜಿಸಲಾಗಿದೆ.
ವಿಮಾನ ನಿಲ್ದಾಣ, ಚಿತ್ರಮಂದಿರಗಳು, ವಾಣಿಜ್ಯ ಸಂಕೀರ್ಣಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣ ವರದಿ ಮಾಡಲು ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.



