ಬೆಂಗಳೂರು: ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್ಲೈನ್ನಲ್ಲಿ ಪಾಲ್ಗೊಳ್ಳುವ ಅವಧಿಯನ್ನು ಇದೇ ನ.30ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಕೆಲವರಿಗೆ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಂತವರಿಗೆ ಅವಕಾಶ ನೀಡುವ ಹಿನ್ನೆಲೆ ಆನ್ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು ಇದೇ ನ.10ರವರೆಗೆ ವಿಸ್ತರಿಸಲಾಗಿತ್ತು. ಆದರೆ ಇದೀಗ ನೀಡಲಾಗಿದ್ದ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್ಲೈನ್ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳಬಹುದು. ಅವಧಿಯನ್ನು ಅಂತಿಮವಾಗಿ ನ.30ರವರೆಗೆ ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



