ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಸೃಷ್ಟಿಸಿರುವ ಬೆನ್ನಲ್ಲೇ ನಾಯಕತ್ವ ಬದಲಾವಣೆ ಗೊಂದಲ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಒಂದು ಬಣ ಹೇಳುತ್ತಿದ್ದರೆ, ನಾಯಕತ್ವ ಬದಲಾವಣೆ ಮುಹೂರ್ತ ಶೀಘ್ರದಲ್ಲೇ ಫಿಕ್ಸ್ ಆಗಲಿದೆ ಎಂಬುವುದು ಮತ್ತೊಂದು ಬಣದ ಮಾಹಿತಿಯಾಗಿದೆ.
ಈ ನಡುವೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು, ಮೈಸೂರಿಗೆ ಆಗಮಿಸುತ್ತಿರುವ ರಾಹಲ್ ಗಾಂಧಿ ಇಲ್ಲಿಂದ ಕೇರಳದ ವಯನಾಡ್ಗೆ ತೆರಳಲಿದ್ದಾರೆ. ಹೀಗಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ನೇರವಾಗಿ ವಯನಾಡ್ಗೆ ತೆರಳಲಿದ್ದು, ಇದಕ್ಕೂ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರೆ ಡಿಕೆಶಿ ಹಲವು ಬಾರಿ ದೆಹಲಿಗೆ ತೆರಳಿದ್ದರೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮೈಸೂರು ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡುವ ಸಾಧ್ಯತೆಯಿದ್ದು, ರಾಜ್ಯ ನಾಯಕರ ಜೊತೆಗೆ ಅಧಿಕೃತ ಭೇಟಿ ನಿಗದಿ ಆಗದೆ ಇದ್ದರೂ ವಿಮಾನ ನಿಲ್ದಾಣದಲ್ಲಿ ಅನೌಪಚಾರಿಕವಾಗಿ ಇಬ್ಬರು ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅಲ್ಲದೆ ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಳ್ಳುವ ಸಂದರ್ಭವನ್ನು ಉಪಯೋಗಿಸಿಕೊಂಡು ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಯ ಬಗ್ಗೆ ಪ್ರಾಥಮಿಕ ಮಾಹಿತಿ ನೀಡುತ್ತಾರೆ ಎನ್ನಲಾಗಿದೆ. ಬಳಿಕ ಈ ನಿಟ್ಟಿನಲ್ಲಿ ಅಂತಿಮ ನಿರ್ಧಾರ ಆಗುವುದಕ್ಕೂ ಮುನ್ನ ದೆಹಲಿಗೆ ಕರೆಸಿಕೊಂಡು ಪಟ್ಟಿ ಪರಿಶೀಲನೆ ನಡೆಸಿ ಅಂತಿಮ ಒಪ್ಪಿಗೆ ನೀಡುವ ಸಾಧ್ಯತೆ ದಟ್ಟವಾಗಿದೆ.



