ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವೆ ಫೆ.17ಕ್ಕೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ ಎಂದಿದ್ದಾರೆ.
ದೆಹಲಿ ಭೇಟಿ ಬಳಿಕ ಆತ್ಮವಿಶ್ವಾಸ ಹೆಚ್ಚಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನು ಯಾವಾಗಲೂ ಭರವಸೆಯಲ್ಲಿಯೇ ಬದುಕುತ್ತೇನೆ. ಪ್ರಯತ್ನ ಇದ್ದರೆ ಫಲ ಸಿಗುತ್ತದೆ. ಭಕ್ತಿ ಇದ್ದರೆ ದೇವರು ಸಿಗುತ್ತಾರೆ,” ಎಂದು ಹೇಳಿದರು.
ಅಧಿಕಾರ ಹಂಚಿಕೆ ವಿಷಯದ ಕುರಿತು ಸ್ಪಷ್ಟೀಕರಣಕ್ಕಾಗಿ ಹೈಕಮಾಂಡ್ ನಾಯಕರನ್ನು ಸಂಪರ್ಕಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.
ಕೆಲವು ಶಾಸಕರು ವಿದೇಶ ಪ್ರವಾಸಕ್ಕೆ ಹೋಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯದ ಬಗ್ಗೆ ನನಗೆ ವರದಿ ಬಂದಿಲ್ಲ. ಅದರ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದರು.
ಹೈಕಮಾಂಡ್ ನಾಯಕರು ಈ ಪ್ರವಾಸವನ್ನು ನಿಲ್ಲಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಹೈಕಮಾಂಡ್ ನಾಯಕರೊಂದಿಗೆ ಇದರ ಬಗ್ಗೆ ಮಾತನಾಡಿಲ್ಲ. ಪ್ರವಾಸಕ್ಕೆ ಹೋಗುತ್ತಿರುವವರು ಈ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಪ್ರವಾಸ ಕಳುಹಿಸುತ್ತಿರುವವರೂ ನನ್ನೊಂದಿಗೆ ಚರ್ಚಿಸಿಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಕೇಳುತ್ತೇನೆ. ಅದನ್ನು ಹೊರತುಪಡಿಸಿ, ನಾನು ಬೇರೆ ಯಾವುದೇ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.
ಶಾಸಕರು ಏನಾದರೂ ಹೇಳಿದರೆ, ಹೈಕಮಾಂಡ್ ನಾಯಕರು ಮತ್ತು ಸಿಎಂ ಅದನ್ನು ನೋಡಿಕೊಳ್ಳುತ್ತಾರೆ. ನಾನು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಾನು ಪಕ್ಷ ಮತ್ತು ಸರ್ಕಾರಕ್ಕೆ ಶಿಸ್ತುಬದ್ಧ ಸಿಪಾಯಿಯಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.



