ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಐದು ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮೂಲಸೌಕರ್ಯ ಕಾಮಗಾರಿಗಳು ಮತ್ತು ಪ್ರವಾಹ ತಡೆಗಟ್ಟುವ ಕಾರ್ಯಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಮತ್ತು ನಾನು ಬೆಂಗಳೂರಿನ ಅನೇಕ ಭಾಗಗಳಿಗೆ ಭೇಟಿ ನೀಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಬೆಂಗಳೂರಿನ ನಾಗರಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ನಗರದ ಎಲ್ಲಾ ನಿಷ್ಕ್ರಿಯ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಲು ಮತ್ತು ಗುಣಮಟ್ಟದ ಪರೀಕ್ಷೆಗಳನ್ನು ನಡೆಸಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿಯು ಪರೀಕ್ಷಾ ವರದಿಗಳನ್ನು ಬಿಡಬ್ಲ್ಯೂಎಸ್ಎಸ್ಬಿಗೆ ಸಲ್ಲಿಸಬೇಕಾಗುತ್ತದೆ” ಎಂದು ಅವರು ಹೇಳಿದರು.
ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ೫ ಅಂಶಗಳ ಯೋಜನೆ: ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿರ್ದೇಶನದಂತೆ ಸರ್ಕಾರ ೨,೬೨೬ ಅತಿಕ್ರಮಣಗಳನ್ನು ಗುರುತಿಸಿದೆ. ೨೦೨೨-೨೩ರ ವೇಳೆಗೆ ೫೫೬ ಅತಿಕ್ರಮಣಗಳನ್ನು ತೆರವುಗೊಳಿಸಲಾಗಿದೆ. ಹಳೆಯ ಅತಿಕ್ರಮಣಗಳಲ್ಲದೆ, ೧,೧೩೬ ಹೊಸ ಅತಿಕ್ರಮಣಗಳನ್ನು ಗುರುತಿಸಲಾಗಿದೆ. ಈ ಅತಿಕ್ರಮಣಗಳನ್ನು ತೆರವುಗೊಳಿಸಲು ಬಿಎಂಟಿಎಫ್ ಗೆ ಸೂಚನೆ ನೀಡಲಾಗಿದೆ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.