ಚಿತ್ರದುರ್ಗ: ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರುವವರ ಯೋಗಕ್ಷೇಮ ವಿಚಾರಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು.
ಜಿಲ್ಲಾ ಆಸ್ಪತ್ರೆ ಮಕ್ಕಳ ವಿಭಾಗ, ತುರ್ತು ನಿಗಾ ಘಟಕಗಳಿಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು, ಅಸ್ವಸ್ಥರಿಗೆ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಘಟನೆಯಲ್ಲಿ ಮೃತಪಟ್ಟ ಮಂಜುಳಾ ಅವರಿಗೆ ಇಬ್ಬರು ಮಕ್ಕಳಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಅಗತ್ಯ ನೆರವು ನೀಡಲಾಗುವುದು. ಸರಕಾರದಿಂದ ಸಿಗುವ ಸೌಲಭ್ಯಗಳನ್ನೂ ತಲುಪಿಸಲಾಗುವುದು ಎಂದರು.
ಸಂವಿಧಾನಬದ್ಧವಾಗಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಶುದ್ಧ ಕುಡಿಯುವ ನೀರು ಪಡೆಯುವುದು ಪ್ರತಿಯೊಬ್ಬರ ಹಕ್ಕು. ಕವಾಡಿಗರ ಹಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡುವಂತೆ ಪುರಸಭೆಗೆ ಸೂಚಿಸಿದ್ದೇನೆ. ಘಟನೆಯ ಸಂತ್ರಸ್ತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ ಸೂಕ್ತ ಕಾನೂನು ನೆರವು ನೀಡಲಾಗುವುದು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಜಿಲ್ಲಾ ಆಸ್ಪತ್ರೆಯಲ್ಲಿ ಬಸವರಾಜ, ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಉಸ್ತುವಾರಿ ಮಲ್ಲಣ್ಣ ಸೇರಿದಂತೆ ಸಿಬ್ಬಂದಿ ಹಾಜರಿದ್ದರು