ಬೆಂಗಳೂರು: ಚಲನಚಿತ್ರ ನಟಿ ಕ್ರಿಷಿ ತಾಪಂಡ ಅವರ ರಾಜರಾಜೇಶ್ವರಿ ನಗರದಲ್ಲಿರುವ ನಿವಾಸದಲ್ಲಿ ಅವರ ಆಪ್ತ ಸ್ನೇಹಿತ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗುರುವಾರ ಬೆಳಗ್ಗೆ ಪ್ರಕರಣ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಅಪಾರ್ಟ್ಮೆಂಟ್ನ ಫ್ಲಾಟ್ಗೆ ಬಂದಿದ್ದ ವೈಶಾಕ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸಮಯದಲ್ಲಿ ನಟಿ ಕ್ರಿಷಿ ತಾಪಂಡ ಕೂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ವೈಶಾಕ್ ಈ ಹಿಂದೆ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ಫೆಬ್ರವರಿಯಲ್ಲಿ ಎಚ್ಎಎಲ್ ಠಾಣೆ ಪೊಲೀಸರು ಅವರನ್ನು ಕ್ರಿಷಿ ತಾಪಂಡ ಅವರ ಮನೆಯಿಂದಲೇ ಬಂಧಿಸಿದ್ದರು. ಜನವರಿಯಲ್ಲಿ ಬ್ಲೂ ಡಾರ್ಟ್ ಕೊರಿಯರ್ ಮೂಲಕ ಉದ್ಯಮಿಗೆ ಅನಾಮಧೇಯ ಬೆದರಿಕೆ ಪತ್ರ ಕಳುಹಿಸಿ, ₹6 ರಿಂದ ₹7 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪವೂ ಅವರ ಮೇಲಿತ್ತು.
ಈ ಪ್ರಕರಣದ ತನಿಖೆ ವೇಳೆ ಆರೋಪಿ ಬಳಸಿದ್ದ ಮೊಬೈಲ್ ಫೋನ್ ನಟಿಯ ಮನೆಯಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಆದರೆ ಮೊಬೈಲ್ ಪತ್ತೆಯಾಗದ ಹಿನ್ನೆಲೆಯಲ್ಲಿ ಅದರ ಬಗ್ಗೆ ತನಿಖೆ ಮುಂದುವರಿದಿದೆ. ಈ ಸಂಬಂಧ ನಟಿ ಕ್ರಿಷಿ ತಾಪಂಡಗೂ ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇದೀಗ ವೈಶಾಕ್ ಸಾವಿನ ಹಿನ್ನೆಲೆ ಪ್ರಕರಣ ಮತ್ತಷ್ಟು ಕುತೂಹಲ ಮತ್ತು ಅನುಮಾನಗಳಿಗೆ ಕಾರಣವಾಗಿದೆ.



