ಗುಂಡ್ಲುಪೇಟೆ: ತಾಲೂಕಿನ ಹುಲಸಗುಂದಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಅಬ್ದುಲ್ ಖಾದರ್ ವಯೋ ನಿವೃತ್ತಿ ಹೊಂದಿದ ಹಿನ್ನೆಲೆ ಶಾಲೆ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಹುಲಸಗುಂದಿ ಗ್ರಾಮದ ಶಾಲಾ ಆವರಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಹಾಗು ಭೀಮನಬೀಡು ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಅಬ್ದುಲ್ ಖಾದರ್ ಅಪಾರ ವಿದ್ಯಾರ್ಥಿ ಬಳಗ ಹೊಂದಿದ್ದು, ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಇವರು ಸಹೃದಯಿ, ಸ್ನೇಹಜೀವಿ, ಸಮಯಪಾಲನೆ ಮತ್ತು ಸರಳತೆಯ ವ್ಯಕ್ತಿತ್ವದಿಂದಲೇ ಇಡೀ ತಾಲೂಕಿಗೆ ಚಿರಪರಿಚಿತರು. ಕನ್ನಡ ಮಾಧ್ಯಮ ಶಾಲೆಯಲ್ಲಿ 27 ವರ್ಷಗಳ ಕಾಲ ದಣಿವರಿಯದೇ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟು ಕೆಲಸ ಮಾಡಿದ್ದಾರೆ. ಇವರು 16 ವರ್ಷಗಳ ಕಾಲ ಗುಂಡ್ಲುಪೇಟೆ ತಾಲೂಕಿನ ಕೂತನೂರು ಶಾಲೆಯಲ್ಲಿ ಕಾರ್ಯ ನಿರ್ವಹಿಸಿದ್ದು, ಪಟ್ಟಣದ ಕುರುಬಗೇರಿ ಶಾಲೆ, ದೇವರಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಕೆಲ ತಿಂಗಳುಗಳ ಕಾಲ ನಿಯೋಜನೆ ಮೇರೆಗೆ ಕೆಲಸ ನಿರ್ವಹಿಸಿದ್ದಾರೆ. ಉಳಿದ 11 ವರ್ಷಗಳ ಕಾಲ ಹುಲಸಗುಂದಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಅದೇ ಶಾಲೆಯಲ್ಲಿ ನಿವೃತ್ತಿ ಹೊಂದಿದ್ದಾರೆ. ಇವರ ಮುಂದಿನ ಜೀವನ ಸುಃಖಕರವಾಗಿರಲಿ ಎಂದು ಶಾಲಾ ಶಿಕ್ಷಕರು ಆಶಿಸಿದರು. ಈ ಸಂದರ್ಭದಲ್ಲಿ ಭೀಮನಬೀಡು ಗ್ರಾಪಂ ಅಧ್ಯಕ್ಷ ಬಿ.ಜಿ.ಶಿವಕುಮಾರ್ ಸೇರಿದಂತೆ ಅಧಿಕಾರಿ ವರ್ಗದವರು, ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಜರಿದ್ದರು.