ನವದೆಹಲಿ: ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಎಐ-171 ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 274ಕ್ಕೆ ಏರಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಯಾಗಿದ್ದು, ಉಳಿದವರು ವಿಮಾನ ಪತನಗೊಂಡ ಮೆಘನಾನಿ ಪ್ರದೇಶದ ವೈದ್ಯಕೀಯ ಕಾಲೇಜು ಹಾಸ್ಟೆಲ್ ಹಾಗೂ ಪಕ್ಕದ ನಿವಾಸಗಳಲ್ಲಿ ಇದ್ದವರು ಎಂದು ವರದಿಯಾಗಿದೆ.
ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣದತ್ತ ಹೊರಟಿದ್ದ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಹಾಸ್ಟೆಲ್ ಮೇಲೆ ಪತನಗೊಂಡಿತು. ಈ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಹಲವರು ಮೃತಪಟ್ಟಿದ್ದಾರೆ. ವಿಮಾನದಲ್ಲಿದ್ದ ಬ್ರಿಟನ್ನ ಪೌರತ್ವ ಹೊಂದಿದ ಭಾರತೀಯ ಮೂಲದ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ.
ವಿಮಾನ ಪತನದ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು, ಇನ್ನೊಂದು ಬ್ಲ್ಯಾಕ್ ಬಾಕ್ಸ್ ಹಾಗೂ ಡಿವಿಆರ್ನ ಶೋಧ ನಡೆಯುತ್ತಿದೆ. ನಾಗರಿಕ ವಿಮಾನಯಾನ ಸಚಿವಾಲಯ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ.
ಈ ಸಮಿತಿಯಲ್ಲಿ ವಿವಿಧ ಉನ್ನತ ಅಧಿಕಾರಿಗಳು, ತಜ್ಞರು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.