ಮಂಗಳೂರು ದಕ್ಷಿಣ ಕನ್ನಡ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 8ರಿಂದ 10ರವರೆಗೆ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ನ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಲೋಕಸಭಾ ಸ್ಪೀಕರ್ ಅವರು ಕರ್ನಾಟದಲ್ಲಿ ಈ ಬಾರಿ ನಡೆಸಲು ಅವಕಾಶ ನೀಡಿದ್ದು, ಬೆಂಗಳೂರಿನಲ್ಲಿ ಈ ಸಮಾವೇಶ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದರು.
ದೇಶದ ಎಲ್ಲಾ ರಾಜ್ಯಗಳ ವಿಧಾನಸಭೆ ಮತ್ತು ವಿಧಾನ ಪರಿಷತ್ತುಗಳ ಸ್ಪೀಕರ್, ಡೆಪ್ಯುಟಿ ಸ್ಪೀಕರ್ಗಳು, ಕಾರ್ಯದರ್ಶಿಗಳು ಸೇರಿದಂತೆ 300ರಷ್ಟು ಮಂದಿ ಭಾಗವಹಿಸಲಿದ್ದಾರೆ. ಸೆ.8ರಂದು ಸಂಜೆ 6 ಗಂಟೆಗೆ ವಿಧಾನ ಸೌಧದ ಗ್ರೌಂಡ್ ಸ್ಟೆಪ್ನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಈ ಸಮ್ಮೇಳನಕ್ಕೆ ಚಾಲನೆ ದೊರಯಲಿದೆ. ಲೋಕಸಭೆ ಸ್ಪೀಕರ್, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಸೇರಿದಂತೆ ಇತರ ಹಲವು ಗಣ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಕಳೆದ ವರ್ಷ ಹೊಸದಿಲ್ಲಿಯಲ್ಲಿ ಈ ಸಮಾವೇಶ ನಡೆದಿದ್ದರೆ, ಅದಕ್ಕಿಂತ ಹಿಂದಿನ ವರ್ಷ ರಾಜಸ್ತಾನದಲ್ಲಿ ನಡೆದಿತ್ತು. ಇದೀಗ ಮೊದಲ ಬಾರಿಗೆ ಕರ್ನಾಟಕದಲ್ಲಿ ನನ್ನ ಮತ್ತು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರ ಅವಧಿಯಲ್ಲಿ ಈ ಅವಕಾಶ ದೊರಕಿದೆ. ಈ ಸಮ್ಮೇಳನವನ್ನು ಮಾದರಿಯಾಗಿ ನಡೆಸಲಾಗುವುದು. ಕೆಲವು ವಿಷಯಗಳ ಆಧಾರದಲ್ಲಿ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ. ಸಂಸದೀಯ ಪ್ರಕ್ರಿಯೆಗಳನ್ನು ಬಲಪಡಿಸುವುದು, ಸ್ಪೀಕರ್ಗಳ ಪಾತ್ರ, ಪ್ರಸಕ್ತ ವಿಚಾರಗಳಿಗೆ ಸಂಬಂಧಿಸಿ ಚರ್ಚೆನಡೆಯಲಿದೆ ಎಂದು ಅವರು ಹೇಳಿದರು.