ಬೆಂಗಳೂರು : ರಾಜ್ಯದ ನಾಗರಿಕರಿಗೆ ಕಂದಾಯ ಇಲಾಖೆ ಮಹತ್ವದ ಸಿಹಿಸುದ್ದಿ ನೀಡಿದೆ. ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ (Permanent Resident Certificate) ಪಡೆಯಲು ಬಯಸುವ ಸಾರ್ವಜನಿಕರು ಜುಲೈ 16ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ತಿಳಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಸರಳಗೊಳಿಸಿರುವ ಇಲಾಖೆ, ಆನ್ಲೈನ್ ಹಾಗೂ ಆಫ್ಲೈನ್ ಎರಡೂ ವಿಧಾನಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಸರ್ಕಾರ ಅಭಿವೃದ್ಧಿಪಡಿಸಿರುವ ಹೊಸ ಮೊಬೈಲ್ ಆಪ್ ಹಾಗೂ ‘ಸೇವಾ ಸಿಂಧು’ ಪೋರ್ಟಲ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು ಎಂದಿದ್ದಾರೆ.
ಈ ಯೋಜನೆಗೆ ಅಗತ್ಯವಿರುವ ಎಲ್ಲಾ ತಾಂತ್ರಿಕ ಮತ್ತು ಆಡಳಿತಾತ್ಮಕ ಸಿದ್ಧತೆಗಳನ್ನು ಇಲಾಖೆ ಪೂರ್ಣಗೊಳಿಸಿದ್ದು, ಜುಲೈ 16ರಿಂದ ಅಧಿಕೃತವಾಗಿ ಸೇವೆ ಆರಂಭವಾಗಲಿದ್ದು, ಅತ್ಯಂತ ಪ್ರಮುಖವಾಗಿ, ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕಾಗಿ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಈ ಸೇವೆಯನ್ನು ಕಂದಾಯ ಇಲಾಖೆ ಸಂಪೂರ್ಣ ಉಚಿತವಾಗಿ ಒದಗಿಸಲಿದೆ.
ಅರ್ಜಿ ಸಲ್ಲಿಕೆಯಾದ ಬಳಿಕ ಸಂಬಂಧಿತ ಅಧಿಕಾರಿಗಳು ದಾಖಲೆಗಳು ಹಾಗೂ ನಿವಾಸದ ಮಾಹಿತಿಯನ್ನು ಪರಿಶೀಲಿಸಲಿದ್ದು, ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಅರ್ಜಿ ಸ್ವೀಕರಿಸಿದ 21 ದಿನಗಳೊಳಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.



