ಬೆಂಗಳೂರು/ಹಾಸನ, : ಹಾಸನ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್ ಇಂದು (ಆಗಸ್ಟ್ 23) ವಿಚಾರಣೆ ನಡೆಸಿದ್ದು, ಈ ಸಂಬಂಧ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ನ ಶ್ರೇಯಸ್ ಎಂ.ಪಟೇಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಪುತ್ರ ಡಿ.ಚರಣ್ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಶ್ರೇಯಸ್ ಪಟೇಲ್ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ವ್ಯಯಿಸಿದ್ದು, ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.