ಮುಂಬೈ : ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ಅನಿಲ್ ಅಂಬಾನಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಕೇಂದ್ರ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಬ್ಯಾಂಕ್ ಆಫ್ ಬರೋಡಾ ನೀಡಿದ ರಿಲಯನ್ಸ್ ಕಮ್ಯುನಿಕೇಷನ್ಸ್ ನಿಂದ 2,220 ಕೋಟಿ ರೂ. ಸಾಲ ವರ್ಗಾವಣೆ ಆರೋಪದ ದೂರಿನ ಮೇರೆಗೆ ಹೊಸ ಪ್ರಕರಣ ದಾಖಲಿಸಲಾಗಿದ್ದು, ಈ ಬಳಿಕ ಸಿಬಿಐ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾವು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ 2,220 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಿದ ಹೊಸ ದೂರಿನ ಆಧಾರದ ಮೇಲೆ ಈ ದಾಳಿ ನಡೆಸಿದ್ದು, ರಿಲಯನ್ಸ್ ಕಮ್ಯುನಿಕೇಷನ್ಸ್ನ ಪ್ರವರ್ತಕ ಮತ್ತು ಹಿಂದಿನ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಕಂಪನಿಯ ಇತರರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಿಮಿನಲ್ ಪಿತೂರಿ, ದುರ್ನಡತೆ, ವಂಚನೆ ಮತ್ತು ಅಧಿಕೃತ ಸ್ಥಾನದ ದುರುಪಯೋಗದ ಆರೋಪ ಮಾಡಲಾಗಿದೆ.
ದೂರಿನಲ್ಲಿ ಏನಿದೆ ಎನ್ನುವುದನ್ನು ನೋಡುವುದಾದರೇ, ರಿಲಯನ್ಸ್ ಕಮ್ಯುನಿಕೇಷನ್ಸ್ಗೆ ನೀಡಲಾದ ಸಾಲಗಳಲ್ಲಿ ಬ್ಯಾಂಕ್ ಆಫ್ ಬರೋಡಾ 2,220 ಕೋಟಿ ರೂ. ಗಳಿಗಿಂತ ಹೆಚ್ಚು ನಷ್ಟವನ್ನು ಅನುಭವಿಸಿದೆ. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸುಳ್ಳು ವಹಿವಾಟುಗಳ ಲೆಕ್ಕವನ್ನು ತೋರಿಸಲಾಗಿದೆ ಮತ್ತು ಸಾಲದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಸಂಸ್ಥೆಯ ಅಕ್ರಮಗಳನ್ನು ಮರೆಮಾಚಲು ಕಂಪನಿಯ ಖಾತೆ ಪುಸ್ತಕಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, 2017 ರಲ್ಲಿ ಸಾಲದ ಖಾತೆಯನ್ನು ಈಗಾಗಲೇ ಕಾರ್ಯನಿರ್ವಹಿಸದ ಆಸ್ತಿ ಎಂದು ವರ್ಗೀಕರಿಸಲಾಗಿತ್ತು ಎಂದು ಕೇಂದ್ರ ತನಿಖಾ ಸಂಸ್ಥೆ ಆರೋಪಿಸಿದೆ.
ಖಾತೆಯಲ್ಲಿ ವಂಚನೆಯಾಗಿದೆ ಎನ್ನುವ ಆರೋಪ ಕೇಳಿ ಬಂದ ಬಳಿಕ ತನಿಖೆಗೆ ತಡೆಯಾಜ್ಞೆಯನ್ನು ತರಲಾಗಿತ್ತು. ಆ ಬಳಿಕ ಬಾಂಬೆ ಹೈಕೋರ್ಟ್ ಇದನ್ನು ತೆರವುಗೊಳಿಸಿದ್ದು, ತಕ್ಷಣವೇ ಬ್ಯಾಂಕ್ ಆಫ್ ಬರೋಡಾ ತನ್ನ ದೂರು ದಾಖಲಿಸಿತ್ತು ಮತ್ತು ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು.
ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಆಧಾರದ ಮೇಲೂ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ಬ್ಯಾಂಕ್ ಆಫ್ ಬರೋಡಾ ದೂರು ನೀಡಿರಲಿಲ್ಲ. ಇದೀಗ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನಗೊಂಡಿದ್ದು, ಈ ಎಲ್ಲಾ ಬ್ಯಾಂಕ್ ಗಳಿಂದ ಪಡೆದ ಸಾಲಕ್ಕೆ ಸಂಬಂಧಿಸಿ ಇದೀಗ ಬ್ಯಾಂಕ್ ಆಫ್ ಬರೋಡಾ ದೂರು ದಾಖಲಿಸಿದೆ.
ಅನಿಲ್ ಅಂಬಾನಿ ಮನೆ, ಕಚೇರಿ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಈ ಸಂದರ್ಭದಲ್ಲಿ ಸಾಲ ವಹಿವಾಟುಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಇದರ ಕುರಿತು ರಿಲಯನ್ಸ್ ಕಮ್ಯುನಿಕೇಷನ್ಸ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.



