ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಕುಮಾರಸ್ವಾಮಿಗೆ ತಾತ್ಕಾಲಿಕ ನೆಮ್ಮದಿ ತಂದಿದೆ.
ರಾಜ್ಯ ಸರ್ಕಾರವು ಕೆಲ ಸಮಯದ ಹಿಂದೆ ಕೇತಗಾನಹಳ್ಳಿ ಪ್ರದೇಶದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಆರೋಪದ ಹಿನ್ನೆಲೆ ಎಸ್ಐಟಿ ರಚಿಸಿತ್ತು. ಈ ತನಿಖಾ ತಂಡವು ಹಿರಿಯ ರಾಜಕೀಯ ಮುಖಂಡರಾದ ಕುಮಾರಸ್ವಾಮಿಯವರ ವಿರುದ್ಧವೂ ತನಿಖೆ ನಡೆಸಲು ಸಜ್ಜಾಗಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ರಚಿಸಿದ್ದ ಎಸ್ಐಟಿಗೆ ತಾತ್ಕಾಲಿಕ ತಡೆ ನೀಡಿದೆ.