ರಾಮನಗರ: ಜಿಲ್ಲೆಯಲ್ಲಾಗುವ ಜನನ ಹಾಗೂ ಮರಣಗಳ ನೋಂದಣಿಯನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಡಿ. ೭ರ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಗರೀಕ ನೋಂದಣಿ ಪದ್ಧತಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನನ ಹಾಗೂ ಮರಣ ನೋಂದಣಿ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು ಹಾಗೂ ಜನನ-ಮರಣದ ನೋಂದಣಿಯನ್ನು ಶೇ. ೧೦೦ ರಷ್ಟು ಗುರಿ ಸಾಧಿಸಬೇಕು, ಕರ್ನಾಟಕ ಜನನ-ಮರಣ ನೋಂದಣಿ (ತಿದ್ದುಪಡಿ) ನಿಯಮಗಳ ಅಧಿಸೂಚನೆಯಂತೆ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ, ಅವರಿಗೆ ಉತ್ತಮ ತರಬೇತಿ ನೀಡುವ ಕುರಿತು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕ್ರಮವಹಿಸಬೇಕು ಎಂದರು.
ಜನನ ಮರಣಗಳ ನೋಂದಣಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದಂತೆ ವರದಿಗಳನ್ನು ಸಕಾಲದಲ್ಲಿ ಸಲ್ಲಿಸಬೇಕು, ಕರ್ನಾಟಕ ಜನನ, ಮರಣ ನೋಂದಣಿ (ತಿದ್ದುಪಡಿ) ನಿಯಮಗಳ ಪ್ರಕಾರ ಜನನ ಮರಣ ನೋಂದಣಿ ವಿಳಂಬ ಶುಲ್ಕವನ್ನು ೧೦೦ ರೂ.ಗಳು, ೨೦೦ ರೂ.ಗಳು ಹಾಗೂ ೫೦೦ ರೂ.ಗಳಿಗೆ ಪರಿಷ್ಕರಿಸಲಾಗಿದೆ ಎಂದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್. ಕೃಷ್ಣಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.