ಬೆಂಗಳೂರು : ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ಮಾಡಿರುವ ಕೇಂದ್ರದ ಈ ನಡೆ ಸರ್ವಾಧಿಕಾರಿ ಧೋರಣೆಯ ಪ್ರದರ್ಶನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 20 ವರ್ಷಗಳ ಹಿಂದೆ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ದುಡಿಮೆಯ ಹಕ್ಕು ನೀಡುವ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇದೀಗ ಬಡವರಿಗೆ ಆರ್ಥಿಕ ಭದ್ರತೆ ನೀಡುವ ಈ ಕಾಯಿದೆಯನ್ನು ಈಗ ವಿಬಿ ರಾಮ್ ಜೀ ಕಾಯಿದೆ ಎಂದು ಬದಲಾಯಿಸಲಾಗಿದೆ. ಈ ಮಹತ್ವದ ಬದಲಾವಣೆ ಮಾಡುವ ಮುನ್ನ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗಾಗಲಿ ಅಥವಾ ಜನರ ಜೊತೆಗಾಗಲಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.
ಇನ್ನೂ ದೇಶದಲ್ಲಿ ಸುಮಾರು 12 ಕೋಟಿ 16 ಲಕ್ಷ ನರೇಗಾ ಕಾರ್ಮಿಕರಿದ್ದು, ಇದರಲ್ಲಿ 6 ಕೋಟಿ 21 ಲಕ್ಷ ಮಹಿಳೆಯರು, ಶೇ. 17ರಷ್ಟು ಎಸ್ಸಿ ಮತ್ತು ಶೇ. 11ರಷ್ಟು ಎಸ್ಟಿ ಸಮುದಾಯದವರಾಗಿದ್ದು, ಕರ್ನಾಟಕವೊಂದರಲ್ಲೇ 71.18 ಲಕ್ಷ ಸಕ್ರಿಯ ಕಾರ್ಮಿಕರಿದ್ದು, ಅದರಲ್ಲಿ ಶೇ. 51.6 ರಷ್ಟು ಮಹಿಳೆಯರೇ ಇದ್ದಾರೆ. ಜನರು ನೆಮ್ಮದಿಯಿಂದ ಜೀವಿಸಲು ಪೂರಕವಾಗಿದ್ದ ಕಾನೂನನ್ನು ನಾಶ ಮಾಡುವುದೇ ಬಿಜೆಪಿಯ ಕೆಲಸ. ಇದಕ್ಕೆ ಆರ್ಎಸ್ಎಸ್ ಮಾರ್ಗದರ್ಶನ ನೀಡುತ್ತಿದೆ. ಈ ಬದಲಾವಣೆಯಿಂದ ಬಡವರಿಗಲ್ಲ, ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗಲಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ರೈತರು ತಮ್ಮ ಹಳ್ಳಿಗಳಲ್ಲೇ ಬಿಜೆಪಿ ಸರ್ಕಾರದ ಸಾಧನೆ ಎಂದರೆ ಕೇವಲ ಹೆಸರು ಬದಲಾವಣೆ ಮಾಡುವುದು ಮಾತ್ರ. ಈಗಾಗಲೇ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಮಾಡಿದ್ದಾರೆ ಎಂದು ಲೇವಡಿ ಮಾಡಿದ ಮುಖ್ಯಮಂತ್ರಿಗಳು, ಕೇಂದ್ರದ ಈ ಜನವಿರೋಧಿ ನೀತಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿರುವುದಾಗಿ ತಿಳಿಸಿದ್ದಾರೆ.



