ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಸಿರಿಧಾನ್ಯ ಹಬ್ಬದ ಅಂಗವಾಗಿ ನಗರದ ಗವಿಮಠ ಆವರಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಥಾ ಕಾರ್ಯಕ್ರಮಕ್ಕೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಆರೋಗ್ಯವೇ ಸಂಪತ್ತು, ಅದನ್ನು ಗಳಿಸಲು ಆರೋಗ್ಯಕರ ಆಹಾರ ಮತ್ತು ಜೀವನ ಶೈಲಿಯನ್ನು ಅಳವಡಿಸಿಕೊಳ್ಳಿ ಎಂದು ಹೇಳಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿಧ್ಯಾಲಯದ ಮುಖ್ಯಸ್ಥರಾದ ಯೋಗಿಣಿ ಅವರು ಮಾತನಾಡಿ ಸಿರಿಧಾನ್ಯಗಳಿಂದ ಆರೋಗ್ಯ ಸಂಪತ್ತು ಪಡೆದುಕೊಂಡು ಔಷಧಿಗಳಿಂದ ದೂರವಿರಿ ಎಂದು ಹೇಳಿದರು. ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶ ಅವರು ಮಾತನಾಡಿ, ರೈತ ದಿನಾಚರಣೆಯ ಅಂಗವಾಗಿ ಡಿ.23 ರಂದು ಕುಷ್ಟಗಿಯ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಸಿರಿಧಾನ್ಯ ಹಬ್ಬ- ಜಿಲ್ಲಾ ಮಟ್ಟದ ಸಿರಿಧಾನ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ರೈತರು ಹಾಜರಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ತಂತ್ರಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ವೀರಣ್ಣ ಕಮತರ್, ಶರಣಪ್ಪ ಕೋಣೆ ಹಾಗೂ ಜಂಬಣ್ಣ ಐಲಿ, ಕೃಷಿ ಸಮಾಜದ ತಾಲ್ಲೂಕು ಅಧ್ಯಕ್ಷ ವಿರುಪಣ್ಣ, ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಜಿಲ್ಲಾ ಕೃಷಿ ಪರಿಕರ ಮಾರಾಟಗಾರರು, ಪೊಲೀಸ್ ಸಿಬ್ಬಂದಿ ಹಾಗೂ ಕೃಷಿ ಇಲಾಖೆಯ ಸಮಸ್ಥ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.