ಚಾಮರಾಜನಗರ : ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಕ್ಷಣ ಅತ್ಯಗತ್ಯವಾಗಿದ್ದು, ಅದು ಜೀವನದಲ್ಲಿ ದುಡಿಮೆಗೆ ದಾರಿಮಾಡಿಕೊಡುತ್ತದೆ ಎಂದು ಹಿರಿಯ ಉಪನ್ಯಾಸಕ ಬಿ. ಶಿವಕುಮಾರ ಅಭಿಪ್ರಾಯಪಟ್ಟರು.
ನಗರದ ನಿಜಗುಣ ರೆಸಾರ್ಟ್ ಸಭಾಂಗಣದಲ್ಲಿ ಚಂದಕವಾಡಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯ ಹಳೆಯ ವಿದ್ಯಾರ್ಥಿಗಳ ಬಳಗದಿಂದ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ ಆಯೋಜಿಸಲಾದ ಗುರು-ವಿದ್ಯಾರ್ಥಿಗಳ ಸ್ನೇಹಸಮ್ಮಿಲನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬುದ್ದ ಬಸವ ಅಂಬೇಡ್ಕರ್ ಅವರ ಆದರ್ಶ ಗಳನ್ನು ಮೈಗೂಡಿಸಿಕೊಳ್ಳಿ, 25 ವರ್ಷಗಳ ಹಿಂದೆ ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಬೆಳ್ಳಿಹಬ್ಬ ಆಚರಿಸುತ್ತಿರುವುದು ಶ್ಲಾಘನೀಯ ಬೆಳವಣಿಗೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ನೊಂದವರು ಮತ್ತು ಅಸಹಾಯಕರಿಗೆ ಸಹಾಯಹಸ್ತ ಚಾಚಿದರೆ ಇಂತಹ ಕಾರ್ಯಕ್ರಮಗಳಿಗೆ ಇನ್ನಷ್ಟು ಅರ್ಥಪೂರ್ಣತೆ ದೊರೆಯುತ್ತದೆ ಎಂದು ಹೇಳಿದರು.
ಶಿಕ್ಷಕ ಆರ್. ಮಲ್ಲೇಶ್ ಮಾತನಾಡಿ, ಹಿಂದೆ ಗುರುಗಳು ಹಾಗೂ ವಿದ್ಯಾರ್ಥಿಗಳ ನಡುವೆ ಗಾಢ ಬಾಂಧವ್ಯವಿತ್ತು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಆ ನಂಟು ಕಡಿಮೆಯಾಗಿದೆ. ವಿದ್ಯಾರ್ಥಿಗಳು ತಮ್ಮಗೆ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಗೌರವದಿಂದ ಕಾಣಬೇಕು ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ವಿದ್ಯಾರ್ಥಿ ಹಾಗೂ ಗಗನ್ ಮೆಡಿಕಲ್ ಮಾಲೀಕ ಶಿವಕುಮಾರ್ ಮಾತನಾಡಿ, “ನಮಗೆ ವಿದ್ಯೆ ನೀಡಿದ ಗುರುಗಳನ್ನು ಮರೆಯಬಾರದು ಎಂಬ ಉದ್ದೇಶದಿಂದ ಹಳೆಯ ವಿದ್ಯಾರ್ಥಿಗಳ ಬಳಗವನ್ನು ಸ್ಥಾಪಿಸಿದ್ದೇವೆ. ಗುರುಗಳನ್ನು ಸನ್ಮಾನಿಸುವ ಉದ್ದೇಶದಿಂದ ಸ್ನೇಹಸಮ್ಮಿಲನ ಆಯೋಜಿಸಿದ್ದು, ಮುಂದೆಯೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಶಾಲೆಯ ಹಿರಿಯ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಿ. ಶಿವಕುಮಾರ್, ಉಪನ್ಯಾಸಕ ನಾರಾಯಣಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಮುದ್ದಪ್ಪ, ಪ್ರಾಂಶುಪಾಲ ಚಂದ್ರಶೇಖರ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಕುಮಾರಸ್ವಾಮಿ, ನಾರಾಯಣಸ್ವಾಮಿ, ಬಿ.ಜಿ.ಶ್ರೀನಿವಾಸ್, ಸೈಯದ್ ರಫಿ, ಎನ್.ಐ.ಎಚ್.ಎನ್. ಮಹೇಶ್, ಉಮೇಶ್, ರಾಜೇಶ್, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು



