ಮಂಡ್ಯ: ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಮಂಡ್ಯ ಜಿಲ್ಲೆ ಮೊದಲನೆಯದಾಗ ಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಆ ದಿಶೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಕರೆ ನೀಡಿದರು.
ಅವರು ಇಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಹಾಗೂ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಬಲವರ್ಧನೆ ಕುರಿತು ತಾಲೂಕು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಶಾಲೆಯಿಂದ ಮಕ್ಕಳು ಹೊರಗುಳಿದ ಬಾಲ್ಯವಿವಾಹಕ್ಕೆ ಪ್ರೇರಣೆಯಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗಮನಿಸಿ ಪೊಷಕರಿಗೆ ಮನವರಿಕೆ ಮಾಡಿ ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸುವ ಕೆಲಸವಾಗಬೇಕಿದೆ ಎಂದರು.
ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು ನಡೆದಾಗ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ತಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದರು.
ಅಪ್ರಾಪ್ತ ವಯಸ್ಸಿನಲ್ಲಿ ಮದುವೆಯಾಗಿ ಹೆಣ್ಣು ಮಗಳು ತಾಯಿಯಾದಾಗ, ಹೆರಿಗೆ ಸಮಯದಲ್ಲಿ ತೀವ್ರ ತೊಂದರೆ, ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಅಲ್ಲದೇ ಪ್ರಸೂತಿ ವೈದ್ಯರಿಗೆ ಇದು ಸವಾಲಾಗಿ ಪರಿಣಮಿಸುತ್ತದೆ. ನಂತರದ ದಿನಗಳಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು.
ಜಿಲ್ಲಾಡಳಿತದ , ತಾಲೂಕು ಆಡಳಿತ ಜೊತೆಗೆ ಸಾರ್ವಜನಿಕರು ಹಾಗೂ ಸಂಘಟನೆಗಳು ಸಹಕರಿಸಿ ಬಾಲ್ಯ ವಿವಾಹವನ್ನು ತಡೆಗಟ್ಟಬೇಕಿದೆ. ಗ್ರಾಮ ಮಟ್ಟದಲ್ಲಿ ಶಾಲೆಯ ಶಿಕ್ಷಕರು ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರಿಕೆ ಅರಿವು ಮೂಡಿಸಿಬೇಕು ಎಂದರು.
ಕಾರ್ಯಕ್ರಮದಲ್ಲಿ , ಸಾರ್ವಜನಿಕ ಶಿಕ್ಷಣ ಇಲಾಖೆಯ ಸಿಎಚ್ ಕಾಳಿರಯ್ಯ, ಟಿಎಚ್ಓ ರವೀಂದ್ರ ಗೌಡ , ಸಿಡಿಪಿಓ ನಾರಾಯಣ, ಸಮಾಜ ಕಲ್ಯಾಣ ಅಧಿಕಾರಿ ನಾಗಲಕ್ಷ್ಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.