ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಮುಖ ಸೂಚನೆಗಳನ್ನು ನೀಡಿದರು. ಕೋವಿಡ್ ಪರೀಕ್ಷೆ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳು ದುಬಾರಿ ಶುಲ್ಕ ವಿಧಿಸುತ್ತಿರುವ ಬಗ್ಗೆ ತಾಕೀತು ಮಾಡಿರುವ ಸಿಎಂ, ಇದಕ್ಕೆ ಸಂಬಂಧಿಸಿದ ದೂರುಗಳು ಬಂದರೆ ತಕ್ಷಣ ಪರಿಶೀಲನೆ ನಡೆಸಿ, ಗಂಭೀರ ಕ್ರಮ ಕೈಗೊಳ್ಳಬೇಕೆಂದು ತೀವ್ರ ಎಚ್ಚರಿಕೆ ನೀಡಿದರು.
ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಚರ್ಚೆಯಾಯಿತು. ಸಿಎಂ ಸಿದ್ದರಾಮಯ್ಯ ಅವರು, ಕೋವಿಡ್ ಬಗ್ಗೆ ಜನರಲ್ಲಿ ಭಯ ಹುಟ್ಟಿಸುವ ಅಗತ್ಯವಿಲ್ಲ, ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ಜನರಲ್ಲಿ ಭಯ ಹುಟ್ಟಿಸದೆ, ವಿಶ್ವಾಸ ಬೆಳೆಸುವ ಕಾರ್ಯವೈಖರಿಯ ಅಗತ್ಯವಿದೆ ಎಂದು ಹೇಳಿದರು.
ಸಂಪೂರ್ಣ ಸಮನ್ವಯದೊಂದಿಗೆ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಕೆಲಸ ನಿರ್ವಹಿಸಬೇಕು ಎಂಬುದು ಅವರ ಸೂಚನೆಯಲ್ಲಿತ್ತು. ಸಭೆಯಲ್ಲಿ ಅಧಿಕಾರಿಗಳು ರಾಜ್ಯದಲ್ಲಿ ಕೈಗೊಂಡಿರುವ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ವಿವರ ನೀಡಿದರು. ಮೇ ತಿಂಗಳ ಬಳಿಕ ದಿನವಾರಿ ಕೋವಿಡ್ ಪರೀಕ್ಷೆಗಳಲ್ಲಿ ಏರಿಕೆಯಿದ್ದು, ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಯುತ್ತಿದೆ ಎಂದು ಮಾಹಿತಿ ನೀಡಲಾಯಿತು.
ಕಳೆದ 10 ದಿನಗಳಲ್ಲಿ ಒಟ್ಟು 5,000ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರಲ್ಲಿ 862 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ. ಆದರೆ, ಇದುವರೆಗೆ ದಾಖಲಾಗಿರುವ 11 ಸಾವುಗಳಲ್ಲಿ ಹೆಚ್ಚಿನವು ಕೋವಿಡ್ನಿಂದಾಗಿ ಅಲ್ಲ; 10 ಸಾವುಗಳು ಇತರೆ ಕಾರಣಗಳಿಂದಾಗಿ ಸಂಭವಿಸಿದ್ದು, ಕೇವಲ ಒಂದೇ ಸಾವು ನೇರವಾಗಿ ಕೊರೋನಾದಿಂದ ಆಗಿದೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಈ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರು, ಪ್ರತಿ ಬಾರಿ ಕೊರೋನಾ ಸಾವು ಸಂಭವಿಸಿದಾಗ ಅದು ಕೊರೋನಾ ಸಾವೇ ಅಥವಾ ಅಲ್ಲವೇ ಎಂಬುದನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ತಿಳಿಸಬೇಕು. ಜನರಲ್ಲಿ ಇರುವ ಆತಂಕವನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.
ಈ ಮಹತ್ವದ ಸಭೆಯಲ್ಲಿ ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.