ಗುಂಡ್ಲುಪೇಟೆ: ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬದ್ಧನಾಗಿದ್ದೇನೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.
ತಾಲೂಕಿನ ಕಳ್ಳಿಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದು, ಪ್ರತಿ ಗ್ರಾಮದವರು ಆಗಬೇಕಿರುವ ಕೆಲಸಗಳ ಬಗ್ಗೆ ತಿಳಿಸಬೇಕು ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ರಚನೆಯಾಗಿ 54 ದಿನಗಳು ಕಳೆದಿದ್ದು, ಇನ್ನೂ ಕಾಲಾವಕಾಶವಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಆಗಬೇಕಾದ ಅಭಿವೃದ್ಧಿ ಮತ್ತು ಜನರ ಕಷ್ಟ, ಸುಃಖಗಳಲ್ಲಿ ಪಾಲ್ಗೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಅಲ್ಲದೇ ನಮ್ಮ ತಂದೆ ಎಚ್.ಎಸ್.ಮಹದೇವಪ್ರಸಾದ್ ಅವರಂತೆ ನಾನು ಅಭಿವೃದ್ಧಿ ಕೆಲಸ ಮಾಡಲು ಸಿದ್ದನಿದ್ದೇನೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ನೇರವಾಗಿ ಅಥವಾ ಆಯಾ ಭಾಗದ ಮುಖಂಡರ ಮೂಲಕ ಅಭಿವೃದ್ಧಿ ಇತರೆ ವಿಷಯಗಳನ್ನು ಹಂಚಿಕೊಳ್ಳಿ ಎಂದು ಸಲಹೆ ನೀಡಿದರು.
ಈಗಾಗಲೇ ಅರ್ಜಿ ಸಲ್ಲಿಸಿರುವ ತಾಲೂಕಿನ ಮಂದಿಗೆ ವಿವಿಧ ನಿಗಮಗಳಿಂದ ಆದ್ಯತೆಯಲ್ಲಿ ಸಾಲ ಕೊಡಿಸಲಾಗುವುದು. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಹಣ ಹೊಂದಾಣಿಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಉಂಟಾಗುವ ಅನುದಾನ ಕೊರತೆ ಮುಂದಿನ ಬಜೆಟ್ನಲ್ಲಿ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಪುರಸಭೆ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಆರ್.ಜಯರಾಂ, ಪುರಸಭೆ ಮಾಜಿ ಉಪಾಧ್ಯಕ ಎಸ್.ರಾಜಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮಾಜಿ ಅಧ್ಯಕ್ಷರಾದ ಎಸ್.ಪ್ರಭು, ಕಳ್ಳೀಪುರರವಿ, ಸದಸ್ಯರಾದ ಗಂಗಾಧರ್, ಶಿವಮಲ್ಲು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.