ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಇದೇ ಜನವರಿ 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಗಣರಾಜ್ಯೋತ್ಸವವನ್ನು ಎಲ್ಲ ಅಗತ್ಯ ಸಿದ್ದತೆಗಳೊಂದಿಗೆ ಅರ್ಥಪೂರ್ಣವಾಗಿ ಕೈಗೊಳ್ಳಲು ತೀರ್ಮಾನಿಸಲಾಯಿತು.
ಆರಂಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿ, ಕೇಂದ್ರ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಣೆಯಾಗಬೇಕು. ಶಿಸ್ತು ಬದ್ದವಾಗಿ ಆಯೋಜನೆ ಮಾಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಬಾರದು. ಅಧಿಕಾರಿಗಳು ಸಿಬ್ಬಂದಿ ಕೂಡ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.
ಗಣರಾಜ್ಯೋತ್ಸವ ದಿನದಂದು ಖಾಸಗಿ ಉದ್ಯಮ ಸಂಸ್ಥೆ ಕೈಗಾರಿಕಾ ಘಟಕಗಳಿಗೂ ರಜೆ ಘೋಷಿಸಲು ಕಾರ್ಮಿಕ ಇಲಾಖೆಗೆ ಸೂಚಿಸಬೇಕು. ಮಹಿಳಾ ಸಂಘಗಳು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಕಾರ್ಯಕ್ರಮ ಪ್ರಸ್ತುತ ಪಡಿಸಲು ಹೆಚ್ಚಿನ ಅವಕಾಶ ಕಲ್ಪಿಸಬೇಕು. ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಶಿಷ್ಟಾಚಾರ ಅನುಸಾರ ಕಾರ್ಯಕ್ರಮ ಆಯೋಜಿಸಲು ಸುತ್ತೋಲೆ ಹೊರಡಿಸುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮ ಕುರಿತು ಮುಖಂಡರು ಸಲಹೆ ಅಭಿಪ್ರಾಯಗಳನ್ನು ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದೆ ಹಾಗೂ ಪೂರ್ವ ಸಿದ್ದತೆಗಳೊಂದಿಗೆ ಏರ್ಪಡಿಸಲು ಸೂಚನೆ ನೀಡಲಾಗುತ್ತದೆ. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಶಿಷ್ಟಚಾರ ಪಾಲಿಸುವ ಸಂಬಂಧ ನಿರ್ದೇಶನ ನೀಡಲಾಗುವುದು. ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳು, ಬ್ಯಾಂಕುಗಳು, ಶಿಕ್ಷಣ ಸಂಸ್ಥೆಗಳು, ಇತರೆ ಕಚೇರಿಗಳಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು ಸೂಚಿಸಿ ವರದಿ ಪಡೆಯಲಾಗುವುದು ಎಂದರು.
ಗಣರಾಜ್ಯೋತ್ಸವದ ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗುತ್ತದೆ. ಸರ್ಕಾರಿ ಶಾಲಾ ಕಾಲೇಜು ಮಕ್ಕಳು ವೈವಿದ್ಯಮಯ ಕಾರ್ಯಕ್ರಮ ನೀಡಲು ಅನುವು ಮಾಡಿಕೊಡಲಾಗುವುದು. ಜಿಲ್ಲೆಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು. ಕಟ್ಟುನಿಟ್ಟಾಗಿ ಅಧಿಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ದೇಶನ ನೀಡಲಾಗುತ್ತದೆ. ಮಹಿಳಾ ಸಂಘಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಸರ್ವರ ಸಹಕಾರದಿಂದ ಯಶಸ್ವಿಯಾಗಿ ಗಣರಾಜ್ಯೋತ್ಸವವನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.