ಕಲಬುರಗಿ : ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಕಲಬುರಗಿಗೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ದೊರೆಯಿತು.
ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಎದುರು ಆಗಮಿಸಿದ ಸಚಿವರನ್ನು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಮೊದಲಿಗೆ ತೆರೆದ ಕಾರಿನಲ್ಲಿ ಬಳಿಕ ಸಿಂಗರಿಸಿದ ಲಾರಿಯಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿ, ಪ್ರಿಯಾಂಕ್ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದರು.
ಇನ್ನೂ ಪ್ರಿಯಾಂಕ್ ಖರ್ಗೆ ಅವರು ಇಡೀ ರಾಜ್ಯ ಸರ್ಕಾರದ ಮುಖವೂ ಆಗಿದ್ದಾರೆ. ಗುಲ್ಬರ್ಗಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಸ್ಥಾಪನೆ ಕೆಲಸ ನಡೆದಿದೆ, ಅದಕ್ಕೆ ಸಚಿವರು 17 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಇದೇ ರೀತಿಯಲ್ಲಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲೂ ಅಂಬಿಗರ ಚೌಡಯ್ಯ ಅವರ ಪ್ರತಿಮೆ ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಬಳಿಕ ವಿಧಾನಪರಿಷತ್ ಸದಸ್ಯರಾದ ಎಂ.ವೈ. ಪಾಟೀಲ್ ಹಾಗೂ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಮುಖ್ಯಮಂತ್ರಿ ಪ್ರಿಯಾಂಕ್ ಖರ್ಗೆ ಅವರ ಸಾಮರ್ಥ್ಯವನ್ನು ಗುರುತಿಸಿ ಮಹತ್ವದ ಖಾತೆಗಳನ್ನು ನೀಡಿದ್ದಾರೆ. ಭವಿಷ್ಯದಲ್ಲಿ ಅವರು ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟರು.



