ನವದೆಹಲಿ : ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದು, ಇದು ಅವರಲ್ಲಿನ ವಿಕೃತ ಮನಸ್ಥಿತಿ ಮತ್ತು ಹತಾಶೆಯನ್ನು ತೋರ್ಪಡಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ವಿರುದ್ಧ ತೀರಾ ಕೆಳ ಮಟ್ಟದ ರಾಜಕಾರಣ ಪ್ರದರ್ಶಿಸುತ್ತಿದ್ದು, ಇದು ಕಾಂಗ್ರೆಸ್ ಸೋಲಿನ ಹತಾಶೆಯನ್ನು ಪ್ರತಿಬಿಂಬಿಸುತ್ತದೆ ಎಂದು ಚಾಟಿ ಬೀಸಿದ್ದಾರೆ. ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯನ್ನು ‘ಭಯೋತ್ಪಾದಕ’ ರಿಗೆ ಹೋಲಿಸುವ ಮೂಲಕ ಕೀಳುಮಟ್ಟಕ್ಕೆ ಇಳಿದಿದ್ದು, ತಾವೊಬ್ಬ ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕ ಎಂಬುದನ್ನೇ ಮರೆತು ವರ್ತಿಸುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುತ್ತಿರುವಂತೆ ತೋರುತ್ತಿದೆ ಎಂದು ಜೋಶಿ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಪಕ್ಷ ಈಗಾಗಲೇ ಸೋಲನ್ನು ಒಪ್ಪಿಕೊಂಡಂತೆ ಕಾಣುತ್ತಿದೆ. ಹೀಗಾಗಿ ಹತಾಶರಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೀಗೆ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಪ್ರಧಾನಿ ಮತ್ತು ದೇಶದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಅಲ್ಲದೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈರ್ವರೂ ಘನತೆ, ಗೌರವ ಮರೆತು ಪ್ರಧಾನಿ ವಿರುದ್ಧ ಕೆಳಮಟ್ಟದ ಭಾಷಣ ಮಾಡಿರುವುದು ದುರಹಂಕಾರದ ಪರಮಾವಧಿ. ಇದು ಅವರ ನೀಚ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ ಎಂದು ಜೋಶಿ ಕಿಡಿಕಾರಿದ್ದಾರೆ. ದೇಶದಲ್ಲಿ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದರೂ ಈ ನಾಯಕರಿಗೆ ಬುದ್ದಿ ಬರಲಿಲ್ಲ ಮತ್ತು ಅದೇ ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ನಕಲಿ ಗಾಂಧಿ ಕುಟುಂಬದ ಓಲೈಕೆ ಹಾಗೂ ದಶಕಗಳ ಕಾಲ ದುರಾಡಳಿತ ನಡೆಸಿ, ತಮ್ಮ ಪ್ರಾತಿನಿಧ್ಯದ ಕ್ಷೇತ್ರವನ್ನು ಹಿಂದುಳಿಸಿ, ಜನರಿಗೆ ದ್ರೋಹ ಬಗೆದಿದ್ದಾರೆ. ತಮ್ಮ ವಿಕೃತ ಮನಸ್ಥಿತಿ, ದ್ವೇಷದ ರಾಜಕಾರಣ ಪ್ರದರ್ಶಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕತೆಯನ್ನು ತೋರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.



