ಬಳ್ಳಾರಿ: ಭಾರತದ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನದ ಆಶಯ ಮತ್ತು ಮೌಲ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ”ವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿದೆ ಮತ್ತು ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸಂಚರಿಸುತ್ತಿರುವ “ಸಂವಿಧಾನ ಜಾಗೃತಿ ಜಾಥಾ” ಕುರಿತು, ಬುಧವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಜ.26 ರ ಗಣರಾಜ್ಯೋತ್ಸವ ದಿನದಂದು ಯುವಜನ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು ಜಾಥಾಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪ್ರದರ್ಶಿಸುವ ಎಲ್ಇಡಿ ಪರದೆ ಹೊಂದಿರುವ ಸ್ತಬ್ಧಚಿತ್ರವು ಜಿಲ್ಲೆಯ 100 ಗ್ರಾಮ ಪಂಚಾಯಿತಿ ಹಾಗೂ 08 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಫೆ.23 ರವರೆಗೆ ಸಂಚರಿಸಲಿದ್ದು, ಈಗಾಗಲೇ ಫೆ.13 ರವರೆಗೆ 64 ಗ್ರಾಮ ಪಂಚಾಯತಿ ಮತ್ತು 04 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತನ್ನ ಸಂಚಾರ ಪೂರ್ಣಗೊಳಿಸಿದೆ ಎಂದು ಅವರು ತಿಳಿಸಿದರು. ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಪೂರ್ವ ನಿಗದಿತ ರೂಟ್ ಮ್ಯಾಪ್ನಂತೆ ಪ್ರತೀ ದಿನ ಸಂಚರಿಸುತ್ತಿದೆ. ಈವರೆಗೆ ಬಳ್ಳಾರಿ, ಸಿರುಗುಪ್ಪ ಮತ್ತು ಕುರುಗೋಡು ತಾಲ್ಲೂಕಿನ 64 ಗ್ರಾಮ ಪಂಚಾಯಿತಿಗಳು ಮತ್ತು 04 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸಿ ಶೇ.73 ರಷ್ಟು ಸ್ಥಳಗಳಲ್ಲಿ ಸಂಚಾರವನ್ನು ಪೂರ್ಣಗೊಳಿಸಿದೆ ಎಂದರು.
ಜಾಥಾವು ಫೆ.14 ರಿಂದ ಕಂಪ್ಲಿ ಮತ್ತು ಸಂಡೂರು ತಾಲ್ಲೂಕಿನಾದ್ಯಂತ ಸಂಚರಿಸಿ ಫೆ.23 ರಂದು ಪೂರ್ಣಗೊಳ್ಳಲಿದೆ. ನಂತರ ಫೆ.24 ಮತ್ತು 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗುವ “ಸಂವಿಧಾನ ಜಾಗೃತಿ ಜಾಥಾ” ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುಖಾಂತರ ಕೊನೆಗೊಳ್ಳಲಿದೆ ಎಂದು ತಿಳಿಸಿದರು. ಪ್ರತೀ ದಿನ, ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳಶ ಮತ್ತು ಪೂರ್ಣಕುಂಭ ಹೊತ್ತ ಮಹಿಳೆಯರ ಮೂಲಕ ಸ್ತಬ್ಧಚಿತ್ರವನ್ನು ಸ್ವಾಗತಿಸಲಾಗುತ್ತಿದ್ದು, ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಗಿರುವ ಸಂವಿಧಾನದ ಮಹತ್ವ, ರಾಜ್ಯ ನಿರ್ದೇಶಕ ತತ್ವಗಳು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯಕ್ಕೆ ಸಂಬಂಧಿಸಿದಂತೆ ಡಾ.ಬಿ.ಆರ್.ಅಂಬೇಡ್ಕರ್ರವರ ಪರಿಕಲ್ಪನೆ, ಬಸವಣ್ಣನವರ ವಚನಗಳು ಹಾಗೂ ಮಹನೀಯರ ನುಡಿಮುತ್ತುಗಳನ್ನು ಜನರು ಕೌತುಕದಿಂದ ವೀಕ್ಷಿಸಿ ಸಂವಿಧಾನದ ಮೌಲ್ಯ ಹಾಗೂ ಆಶಯಗಳ ಕುರಿತು ತಿಳಿದುಕೊಳ್ಳುತ್ತಿದ್ದಾರೆ. ಜಾಥಾದ ಉದ್ದಕ್ಕೂ “ಸಂವಿಧಾನದ ಆತ್ಮ” ಆಗಿರುವ ಸಂವಿಧಾನದ ಪ್ರಸ್ತಾವನೆಯ ಪ್ರತಿಯನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.
ಪ್ರತೀ ದಿನ ಸಂವಿಧಾನದ ಮಹತ್ವದ ಕುರಿತು ನುರಿತ ಭಾಷಣಕಾರರಿಂದ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಜಾಥಾದಲ್ಲಿ ಬೈಕ್ ರ್ಯಾಲಿ, ಎತ್ತಿನ ಬಂಡಿ ರ್ಯಾಲಿ, ಸೈಕಲ್ ರ್ಯಾಲಿ, 50 ಮೀ. ಉದ್ದದ ರಾಷ್ಟ್ರ ಧ್ವಜ ಪ್ರದರ್ಶನ ಮತ್ತು ಬಲೂನು ಹಾರಿಸುವ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖಂಡರುಗಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದಾರೆ.