ದಾವಣಗೆರೆ : ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ದೊರೆತಿದೆ.
ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (POCSO) ಅಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ ಪೋಕ್ಸೋ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಮಠದಲ್ಲಿ ಅಸಭ್ಯ ವರ್ತನೆ ಆರೋಪ : ಮಠದ ಆವರಣದಲ್ಲಿ ಅಪ್ರಾಪ್ತ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಹಾಗೂ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ವಚನಾನಂದ ಸ್ವಾಮೀಜಿಯವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ನೊಂದ ಮಕ್ಕಳ ಪೋಷಕರು ಹಾಗೂ ಸಂಘಟನೆಗಳ ದೂರಿನ ಆಧಾರದ ಮೇಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ : ಪ್ರಕರಣದ ತನಿಖೆ ಹಾಗೂ ಕಾನೂನು ಪ್ರಕ್ರಿಯೆಯ ಭಾಗವಾಗಿ ದಾವಣಗೆರೆಯ ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಸ್ವಾಮೀಜಿಯವರ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ವಾದಗಳನ್ನು ಆಲಿಸಿದ ನ್ಯಾಯಾಧೀಶರು, ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದ್ದು, ಇದರಿಂದ ನ್ಯಾಯಾಲಯದ ಈ ಆದೇಶದಿಂದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ವಚನಾನಂದ ಸ್ವಾಮೀಜಿಯವರಿಗೆ ತಾತ್ಕಾಲಿಕ ರಿಲೀಫ್ ದೊರೆತಂತಾಗಿದೆ.



