ಚಿಕ್ಕಮಗಳೂರು: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಚಿಕ್ಕಮಗಳೂರಿನ ಬಿಜೆಪಿ ಕಚೇರಿ ಮತ್ತು ಸಿ.ಟಿ.ರವಿ ಅವರ ನಿವಾಸದ ಎದುರು ಕಾರ್ಯಕರ್ತರು ಡ್ಯಾನ್ಸ್ ಮಾಡಿ ಖುಷಿ ವ್ಯಕ್ತಪಡಿಸಿದರು. ಸಂಭ್ರಮಾಚರಣೆ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ಕೂಡ ನಡೆಯಿತು.
ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಾ ಕಾರ್ಯಕರ್ತರು ಮೆರವಣಿಗೆ ಸಾಗಿದರು. ಸುಮಾರು 500 ಮೀಟರ್ ದೂರದ ವರೆಗೂ ಕುಣಿದು ಕುಪ್ಪಳಿಸಿದರು.
ಸಿ.ಟಿ.ರವಿ ಮನೆ ಮುಂದೆ ನೂರಾರು ಕಾರ್ಯಕರ್ತರು ನೆರೆದಿದ್ದರು. ಬಾಗಿಲಲ್ಲಿ ರವಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದರು.
ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂದು ಸಿ.ಟಿ.ರವಿ ಅವರನ್ನು ಗುರುವಾರ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿಗೆ ಜಾಮೀನು ನೀಡಿದೆ. ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.